ADVERTISEMENT

ಕೃಷಿ ಕಾಯ್ದೆ ವಾಪಸ್ ತರುವ ಯೋಜನೆ ಸರ್ಕಾರದ ಮುಂದಿಲ್ಲ: ತೋಮರ್ ಸ್ಪಷ್ಟನೆ

ಪಿಟಿಐ
Published 26 ಡಿಸೆಂಬರ್ 2021, 10:37 IST
Last Updated 26 ಡಿಸೆಂಬರ್ 2021, 10:37 IST
ನರೇಂದ್ರ ಸಿಂಗ್ ತೋಮರ್
ನರೇಂದ್ರ ಸಿಂಗ್ ತೋಮರ್   

ನವದೆಹಲಿ: ರದ್ದುಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಾಪಸ್ ತರುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ. ಈ ವಿಷಯದ ಕುರಿತಾಗಿ ಕಾಂಗ್ರೆಸ್ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಭಾನುವಾರ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಕೃಷಿ ಕಾಯ್ದೆ ಕುರಿತು ತೋಮರ್ ನೀಡಿರುವ ಹೇಳಿಕೆಯು ವಿವಾದಕ್ಕೀಡಾಗಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರಿಂದ ಟೀಕೆಗೆ ಗುರಿಯಾಗಿದ್ದರು.

ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕೃಷಿ ಕಾರ್ಯಕ್ರಮದಲ್ಲಿ ನೀಡಿರುವ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಆ ರೀತಿಯ ಹೇಳಿಕೆ ನೀಡಿಯೇ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

'ರೈತರ ಹಿತಕ್ಕಾಗಿ ಮೂರು ಕೃಷಿ ಸುಧಾರಣಾ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಆದರೆ ದೆಹಲಿಯಲ್ಲಿ ರೈತರ ಪ್ರತಿಭಟನೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಕಾನೂನುಗಳನ್ನು ಹಿಂಪಡೆಯಲು ನಿರ್ಧರಿಸಿದರು. ತಮ್ಮ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷವು ತಿರುಚಲು ಪ್ರಯತ್ನಿಸಿದೆ. ಈ ಕುರಿತು ರೈತರು ಎಚ್ಚರವಾಗಿರಬೇಕು' ಎಂದು ಹೇಳಿದ್ದಾರೆ.

'ಆ ಸಮಾರಂಭದಲ್ಲಿ ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ಒಂದು ಹೆಜ್ಜೆ ಹಿಂದೆ ಇರಿಸಿದ್ದೇವೆ. ಆದರೆ ರೈತರ ಕಲ್ಯಾಣಕ್ಕಾಗಿ ಸರ್ಕಾರವು ಯಾವಾಗಲೂ ಮುಂದಕ್ಕೆ ಚಲಿಸುತ್ತದೆ ಎಂದು ಹೇಳಿದ್ದೆ. ಹಾಗಾಗಿ ಈ ವಿಷಯದಲ್ಲಿ ಯಾವುದೇ ತಪ್ಪು ಗ್ರಹಿಕೆ ಇರಬಾರದು. ಕೃಷಿ ಕಾಯ್ದೆಗಳನ್ನು ಮರಳಿ ತರುವ ಯಾವುದೇ ಉದ್ದೇಶವನ್ನು ಸರ್ಕಾರ ಹೊಂದಿಲ್ಲ' ಎಂದು ತಿಳಿಸಿದ್ದಾರೆ.

ತೋಮರ್ ಹೇಳಿಕೆಯನ್ನು ಉಲ್ಲೇಖಿಸಿದ್ದ ಕಾಂಗ್ರೆಸ್, ಮುಂಬರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರವು ಮತ್ತೆ ಜಾರಿಗೆ ತರಲಿದೆ ಎಂದು ಆರೋಪಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.