
ಹೈಕೋರ್ಟ್ ಆದೇಶ
ನೊಯಿಡಾ: ದಾದ್ರಿಯಲ್ಲಿ 2015ರಲ್ಲಿ ನಡೆದ ಮೊಹಮ್ಮದ್ ಅಖ್ಲಾಕ್ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸೂರಜ್ಪುರದ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.
‘ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿಯನ್ನು ‘ಆಧಾರರಹಿತ’ ಎಂದು ಹೇಳಿ ವಜಾಗೊಳಿಸಿದೆ. ಪ್ರತಿದಿನ ವಾದ–ಪ್ರತಿವಾದ ಆಲಿಸಿ ವಿಚಾರಣೆಯನ್ನು ತ್ವರಿತಗೊಳಿಸುವಂತೆ ನಿರ್ದೇಶಿಸಿದೆ. ಮುಂದಿನ ವಿಚಾರಣೆಯನ್ನು ಜನವರಿ 6ಕ್ಕೆ ನಿಗದಿಪಡಿಸಲಾಗಿದೆ’ ಎಂದು ಅಖ್ಲಾಕ್ ಅವರ ಕುಟುಂಬದ ಪರ ವಕೀಲ ಯೂಸುಫ್ ಸೈಫಿ ತಿಳಿಸಿದರು.
ಸಾಮಾಜಿಕ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಎಲ್ಲ ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯಲು ಅನುಮತಿ ಕೋರಿ ಉತ್ತರ ಪ್ರದೇಶ ಸರ್ಕಾರ ನ್ಯಾಯಾಲಯದ ಮೊರೆ ಹೋಗಿತ್ತು. ರಾಜ್ಯ ಸರ್ಕಾರ ಮತ್ತು ಪ್ರಾಸಿಕ್ಯೂಷನ್ ಇಲಾಖೆಯ ಜಂಟಿ ನಿರ್ದೇಶಕರ ನಿರ್ದೇಶನದ ಅನ್ವಯ ಜಿಲ್ಲಾ ಸಹಾಯಕ ಸರ್ಕಾರಿ ವಕೀಲರು (ಅಪರಾಧ) ಅರ್ಜಿ ಸಲ್ಲಿಸಿದ್ದರು.
ಉತ್ತರ ಪ್ರದೇಶದ ದಾದ್ರಿಯಲ್ಲಿ ಗೋವಿನ ಮಾಂಸ ಸಂಗ್ರಹಿಸಿಟ್ಟಿದ್ದಾರೆ ಎನ್ನುವ ಗಾಳಿಸುದ್ದಿ ಕಾರಣಕ್ಕೆ ಅಖ್ಲಾಕ್ ಎಂಬ ವ್ಯಕ್ತಿಯನ್ನು ಗುಂಪುಹತ್ಯೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.