ADVERTISEMENT

ಜಾರಿಯಾಗದ ವೇತನ ಆಯೋಗದ ಶಿಫಾರಸು: ವಿಚಾರಣೆಗೆ ಹಾಜರಾದ ಮುಖ್ಯ ಕಾರ್ಯದರ್ಶಿಗಳು

ಪಿಟಿಐ
Published 27 ಆಗಸ್ಟ್ 2024, 14:19 IST
Last Updated 27 ಆಗಸ್ಟ್ 2024, 14:19 IST
supreme-court-
supreme-court-   

ನವದೆಹಲಿ: ಎರಡನೆಯ ರಾಷ್ಟ್ರೀಯ ನ್ಯಾಯಾಂಗ ವೇತನ ಆಯೋಗದ (ಎಸ್‌ಎನ್‌ಜೆಪಿಸಿ) ಶಿಫಾರಸುಗಳನ್ನು ಜಾರಿಗೊಳಿಸದೆ ಇರುವ ಆರೋಪಕ್ಕೆ ಸಂಬಂಧಿಸಿದಂತೆ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ನಡೆದ ವಿಚಾರಣೆಯಲ್ಲಿ ಖುದ್ದು ಹಾಜರಾಗಿದ್ದರು.

ನ್ಯಾಯಾಂಗದ ಅಧಿಕಾರಿಗಳಿಗೆ ಪಿಂಚಣಿ ಹಿಂಬಾಕಿ ಮತ್ತು ನಿವೃತ್ತಿ ಪ್ರಯೋಜನಗಳ ಪಾವತಿಗೆ ಸಂಬಂಧಿಸಿದಂತೆ ಆಯೋಗ ಮಾಡಿದ ಶಿಫಾರಸುಗಳನ್ನು ಜಾರಿಗೊಳಿಸಿಲ್ಲ ಎಂಬ ಆರೋಪ ಇದೆ.

ಮಧ್ಯಪ್ರದೇಶ, ತಮಿಳುನಾಡು, ಮೇಘಾಲಯ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಕೇರಳ ಮತ್ತು ದೆಹಲಿಯ ಮುಖ್ಯ ಕಾರ್ಯದರ್ಶಿಗಳು ಶಿಫಾರಸಿನ ಅನುಷ್ಠಾನಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಮಾಣಪತ್ರ ಸಲ್ಲಿಸಿದರು.

ADVERTISEMENT

ಈ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಕ್ರಮ ಜರುಗಿಸಬಾರದು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಆದೇಶಿಸಿತು. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರೂ ಈ ಪೀಠದಲ್ಲಿ ಇದ್ದಾರೆ.

ಶಿಫಾರಸುಗಳನ್ನು ಅನುಷ್ಠಾನಕ್ಕೆ ತಂದಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಕೋರ್ಟ್‌ ವಿಚಾರಣೆಗೆ ಹಾಜರಾಗಬೇಕಿಲ್ಲ ಎಂದು ಪೀಠ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.