ADVERTISEMENT

ಉತ್ತರ ಪ್ರದೇಶ ಹಿಂದುಳಿಯಲು ಬಿಎಸ್‌ಪಿ, ಎಸ್‌ಪಿ, ಬಿಜೆಪಿ ಕಾರಣ: ರಾಹುಲ್‌ ಟೀಕೆ

ಅಮೇಠಿಯಲ್ಲಿ ಕಾಂಗ್ರೆಸ್‌ ಪ್ರಚಾರ ಸಭೆ: ರಾಹುಲ್ ಗಾಂಧಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2022, 19:30 IST
Last Updated 25 ಫೆಬ್ರುವರಿ 2022, 19:30 IST
ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್‌ ಗಾಂಧಿ
ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್‌ ಗಾಂಧಿ   

ಅಮೇಠಿ (ಉತ್ತರ ಪ್ರದೇಶ): ‘ಈ ಹಿಂದೆ ಉತ್ತರ ಪ್ರದೇಶದಲ್ಲಿ ಆಳ್ವಿಕೆ ನಡೆಸಿದ್ದ ಪಕ್ಷಗಳು, ರಾಜ್ಯವನ್ನು ಅಭಿವೃದ್ಧಿಯಲ್ಲಿ ಹಿಂದುಳಿಯುವಂತೆ ಮಾಡಿವೆ. ಹೀಗಾಗಿಯೇ ರಾಜ್ಯದ ಜನರು ಉದ್ಯೋಗ ಅರಸಿಕೊಂಡು ಮಹಾರಾಷ್ಟ್ರ, ಪಂಜಾಬ್‌, ರಾಜಸ್ಥಾನಕ್ಕೆ ವಲಸೆ ಹೋಗುತ್ತಾರೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದ ಅಮೇಠಿಯಲ್ಲಿ ಕಾಂಗ್ರೆಸ್‌ ಶುಕ್ರವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ರಾಹುಲ್ ಮಾತನಾಡಿದರು.‘ಉತ್ತರ ಪ್ರದೇಶದಲ್ಲಿ ಸಂಪನ್ಮೂಲಕ್ಕೆ ಕೊರತೆ ಇಲ್ಲ. ಆದರೆ ಇಷ್ಟು ವರ್ಷ ಆಳ್ವಿಕೆ ನಡೆಸಿದ ಸಮಾಜವಾದಿ ಪಕ್ಷ, ಬಿಎಸ್‌ಪಿ ಮತ್ತು ಬಿಜೆಪಿ ನಿಮಗೆ ಸುಳ್ಳು ಭರವಸೆಗಳನ್ನು ನೀಡಿ, ನಿಮ್ಮ ಹಣವನ್ನು ಕಸಿದುಕೊಂಡಿವೆ ಅಷ್ಟೆ’ ಎಂದು ಅವರು ಆರೋಪಿಸಿದ್ದಾರೆ.

‘ಸಣ್ಣ ಮತ್ತು ಮಧ್ಯಮ ಮಟ್ಟದ ವ್ಯಾಪಾರಿಗಳು ಮತ್ತು ರೈತರು ಇಲ್ಲಿ ದೊಡ್ಡ ಮಟ್ಟದ ಉದ್ಯೋಗದಾತರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳಿಂದ ಸಣ್ಣ ವ್ಯಾಪಾರಿಗಳು ಮತ್ತು ರೈತರ ಬೆನ್ನೆಲುಬು ಮುರಿದಿದೆ. ಹೀಗಾಗಿಯೇ ರಾಜ್ಯದಲ್ಲಿ ಉದ್ಯೋಗಗಳು ನಷ್ಟವಾಗಿವೆ. ಹೊಸ ಉದ್ಯೋಗಗಳೂ ಸೃಷ್ಟಿಯಾಗುತ್ತಿಲ್ಲ’ ಎಂದು ರಾಹುಲ್ ಟೀಕಿಸಿದ್ದಾರೆ.

ADVERTISEMENT

ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ‘ಬಡವರು ಮತ್ತು ದಲಿತರ ಮೇಲೆ ದೌರ್ಜನ್ಯ ನಡೆದಾಗ ಬಿಜೆಪಿ, ಸಮಾಜವಾದಿ ಪಕ್ಷ ಮತ್ತು ಬಿಜೆಪಿ ನಾಯಕರು ಮನೆಬಿಟ್ಟು ಹೊರಗೆ ಬರಲಿಲ್ಲ. ಸಂತ್ರಸ್ತರನ್ನು ನಿಲ್ಲಿಸಿ, ಈ ನಾಯಕರು ಕುಳಿತುಕೊಳ್ಳುತ್ತಾರೆ’ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.