ಮಲ್ಲಿಕಾರ್ಜುನ ಖರ್ಗೆ ಹಾಗೂ ನರೇಂದ್ರ ಮೋದಿ
–ಪಿಟಿಐ ಚಿತ್ರ
ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತ ಮತ್ತು ಭಾರಿ ಮಳೆಯಿಂದ ತತ್ತರಿಸಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಈಶಾನ್ಯ ರಾಜ್ಯಗಳಿಗೆ ನೆರವು ಘೋಷಿಸಬೇಕೆಂದು ಮೋದಿಯನ್ನು ಒತ್ತಾಯಿಸಿದ್ದಾರೆ.
2016ರಲ್ಲಿ ಅಸ್ಸಾಂ ರಾಜ್ಯವನ್ನು ಪ್ರವಾಹ ಮುಕ್ತಗೊಳಿಸುವುದಾಗಿ ಮೋದಿ ಭರವಸೆ ನೀಡಿದ್ದರು. ಸ್ಮಾರ್ಟ್ ಸಿಟಿ ಎಂದು ಕರೆಯಲ್ಪಡುವ ಗುವಾಹಟಿಯ ದೃಶ್ಯಗಳನ್ನು ನೋಡಿದಾಗ, ಡಬಲ್ ಎಂಜಿನ್ ಸರ್ಕಾರಗಳು ಅಸ್ಸಾಂಗೆ ಹೇಗೆ ದ್ರೋಹ ಬಗೆದಿವೆ ಎಂಬುದನ್ನು ನೆನಪಿಸುತ್ತದೆ ಎಂದು ಖರ್ಗೆ ಟೀಕಿಸಿದ್ದಾರೆ.
ಅಸ್ಸಾಂ, ಅರುಣಾಚಲ, ಮಣಿಪುರ, ಸಿಕ್ಕಿಂ ಮತ್ತು ಮೇಘಾಲಯ ಅತಿ ಹೆಚ್ಚು ಹಾನಿಗೊಳಗಾದ ರಾಜ್ಯಗಳಾಗಿವೆ. ಮಳೆ ಸಂಬಂಧಿತ ಅವಘಡಗಳಲ್ಲಿ ಅನೇಕ ಮಂದಿ ಮೃತಪಟ್ಟಿದ್ದರೆ, ಲಕ್ಷಾಂತರ ಜನರು ತೊಂದರೆಗೀಡಾಗಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ.
ಅಭಿವೃದ್ಧಿ ವಿಷಯಗಳಿಂದ ಭಾವನಾತ್ಮಕ ವಿಷಯಗಳತ್ತ ಗಮನ ಸೆಳೆಯುವುದು ಹಾಗೂ ವಿಚಲಿತಗೊಳಿಸುವುದು ಬಿಜೆಪಿಯ ರಾಜಕೀಯದ ವಿಶಿಷ್ಟ ಲಕ್ಷಣವಾಗಿದೆ. ಈ ಸಂದರ್ಭದಲ್ಲಿ ಮೋದಿ ಸರ್ಕಾರ, ಯಾವುದೇ ಲೆಕ್ಕಪರಿಶೋಧನೆಯಿಲ್ಲದೆಯೇ ಕೋಟ್ಯಂತರ ರೂಪಾಯಿ ಮೌಲ್ಯದ ಪಿಎಂ ಕೇರ್ಸ್ ನಿಧಿಯ ಬಾಗಿಲು ತೆರೆಯಬಹುದು ಎಂದು ಖರ್ಗೆ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.