ADVERTISEMENT

ಯುಪಿಎಸ್‌ಸಿ ಪರೀಕ್ಷೆ: ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ

ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಪಿಟಿಐ
Published 22 ಜನವರಿ 2021, 7:14 IST
Last Updated 22 ಜನವರಿ 2021, 7:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ‌: ‘ಕೋವಿಡ್‌ 19‘ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ನಡೆದ ಯುಪಿಎಸ್‌ಸಿ ಪರೀಕ್ಷೆಗಳಿಗೆ ಕೊನೆ ಕ್ಷಣದಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.‌

ಕೇಂದ್ರ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ.ರಾಜು ಅವರು ಈ ಕುರಿತು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಿದರು. ಈ ನ್ಯಾಯಪೀಠದಲ್ಲಿ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೃಷ್ಣ ಮುರೈ ಅವರೂ ಇದ್ದಾರೆ.

‘ಕೋವಿಡ್‌ 19‘ ಸಾಂಕ್ರಾಮಿಕದಿಂದಾಗಿ 2020ರ ಯುಪಿಎಸ್‌ಸಿ ಪರೀಕ್ಷೆ ತಪ್ಪಿಸಿಕೊಂಡ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡಲು ಸರ್ಕಾರ ಸಿದ್ಧವಿಲ್ಲ. ಈ ಬಗ್ಗೆ ಗುರುವಾರ ರಾತ್ರಿ ಸರ್ಕಾರ ಸೂಚನೆ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸದಿಂತೆ ಪ್ರಮಾಣ ಪತ್ರ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು‘ ಎಂದು ರಾಜು ಅವರು ಪೀಠಕ್ಕೆ ಮನವಿ ಮಾಡಿದರು.

ADVERTISEMENT

ಪರೀಕ್ಷೆಗೆ ಮತ್ತೊಂದು ಅವಕಾಶ ನೀಡುವಂತೆ ಕೋರಿ ನಾಗರಿಕ ಸೇವೆಗಳ ಆಕಾಕ್ಷಿ ರಚನಾ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ಜ.25ಕ್ಕೆ ಮುಂದೂಡಿದೆ. ಈ ಅವಧಿಯಲ್ಲಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಈ ಹಿಂದೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಇಂಥ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಇನ್ನೂ ಒಂದು ಅವಕಾಶವನ್ನು ನೀಡುವ ವಿಷಯವನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.