ADVERTISEMENT

ಟಿಡಿಪಿ ನಾಯಕ ವೆಂಕಟರಾವ್ ಬಂಧನದ ಹಿಂದೆ ರಾಜಕೀಯವಿಲ್ಲ: ವೈಎಸ್‌ಆರ್‌ ಕಾಂಗ್ರೆಸ್

ಏಜೆನ್ಸೀಸ್
Published 22 ಜನವರಿ 2021, 2:31 IST
Last Updated 22 ಜನವರಿ 2021, 2:31 IST
ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ
ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ   

ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಕೆ.ಕೆ. ವೆಂಕಟರಾವ್‌ ಬಂಧನವು ಕಾನೂನಾತ್ಮಕ ಪ್ರಕ್ರಿಯೆಯಾಗಿದ್ದು, ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಆಡಳಿತಾರೂಢ ಯುವಜನ ಶ್ರಮಿಕ ರೈತು ಕಾಂಗ್ರೆಸ್‌ ಪಕ್ಷದ (ವೈಎಸ್‌ಆರ್‌ಸಿಪಿ) ಪ್ರಧಾನ ಕಾರ್ಯದರ್ಶಿ ಮತ್ತು ಆಂಧ್ರ ಪ್ರದೇಶ ಸಾರ್ವಜನಿಕ ವ್ಯವಹಾರ ಖಾತೆ ಸಚಿವ ಎಸ್‌. ರಾಮಕೃಷ್ಣ ರೆಡ್ಡಿ ಹೇಳಿದ್ದಾರೆ.

ವೈಎಸ್‌ಆರ್‌ಸಿಪಿ ಸಂಸದ ವಿಜಯಸಾಯಿ ರೆಡ್ಡಿ ಅವರ ಬೆಂಗಾವಲು ಸಿಬ್ಬಂದಿ ಮೇಲೆ ನಡೆದ ಹಲ್ಲೆ ಪ್ರಕರಣದ ತನಿಖೆಯ ಭಾಗವಾಗಿ ಪೊಲೀಸರು ವೆಂಕಟರಾವ್‌ ಅವರನ್ನು ಕರೆಸಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ವೈಎಸ್‌ಆಸ್‌ಸಿಪಿ ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಈ ತಿಂಗಳ ಆರಂಭದಲ್ಲಿ ರಾಮತೀರ್ಥಂ ನಲ್ಲಿ ಗಲಾಟೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೆಂಕಟರಾವ್‌ ಅವರನ್ನು ಶ್ರೀಕುಳಂ ಜಿಲ್ಲೆಯ ರಾಜಮ್‌ ಪಟ್ಟಣದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಬಂಧಿಸಿದ್ದರು. ಬಳಿಕ ಗುರುವಾರ ರಾತ್ರಿ ಬಿಡುಗಡೆ ಮಾಡಿದ್ದರು.

ADVERTISEMENT

ಈ ಸಂಬಂಧ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಪೊಲೀಸ್‌ ವ್ಯವಸ್ಥೆ ಆಡಳಿತ ಪಕ್ಷದ ಆದೇಶದಂತೆ ಕಾರ್ಯನಿರ್ವಹಿಸುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಇದರ ಜವಾಬ್ದಾರಿ ಹೊತ್ತು ಡಿಜಿಪಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಾಮಕೇಷ್ಣ ರೆಡ್ಡಿ, ‘ಇದು ಟಿಡಿಪಿಯ ಮತ್ತೊಂದು ಮಾರ್ಗವಾಗಿದೆ. ಟಿಡಿಪಿ ಆಡಳಿತದಲ್ಲಿ ಪೊಲೀಸರು ರಾಜಕೀಯ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯದ ವಿಶೇಷ ಸ್ಥಾನಕ್ಕಾಗಿ ಆಗ್ರಹಿಸಿ ವಿಶಾಖಪಟ್ಟಣಂನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಭೇಟಿಯಾಗಲು ತೆರಳಿದ್ದ ಆಗಿನ ವಿರೋಧ ಪಕ್ಷದ ನಾಯಕ ಜಗನ್‌ಮೋಹನ್‌ ರೆಡ್ಡಿ ಅವರನ್ನು ಪೊಲೀಸರು ತಡೆದಿದ್ದರು. ಟಿಡಿಪಿ ಆಡಳಿತವಿದ್ದಾಗ ಅರಾಜಕತೆ ಚಾಲ್ತಿಯಲ್ಲಿತ್ತು. ಆದರೆ ಈಗ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಪೊಲೀಸರ ಕರ್ತವ್ಯ ನಿರ್ವಹಣೆಗೆ ಯಾವುದೇ ಹಸ್ತಕ್ಷೇಪಗಳಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.