ರಥ ಯಾತ್ರೆಯಲ್ಲಿ ಸೇರಿದ ಜನಸ್ತೋಮ
–ಪಿಟಿಐ ಚಿತ್ರ
ಭುವನೇಶ್ವರ: ಮೂರು ಮಂದಿ ಸಾವಿಗೀಡಾಗಿ 50ಕ್ಕೂ ಅಧಿಕ ಮಂದಿ ಗಾಯಗೊಂಡ ಪುರಿ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಮೋಹನ್ ಚರಣ್ ಮಾಜ್ಹಿ ಹಾಗೂ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದ್ರನ್ ರಾಜೀನಾಮೆ ನೀಡಬೇಕು ಎಂದು ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.
ಅಲ್ಲದೆ ಮೃತರ ಕುಟುಂಬಕ್ಕೆ ₹50 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ.
ಮೃತರ ಕುಟುಂಬಕ್ಕೆ ಸರ್ಕಾರ ₹ 25 ಲಕ್ಷ ಪರಿಹಾರ ಘೋಷಿಸಿದ್ದು, ಇದೇನೂ ಸಾಲದು ಎಂದು ಕಾಂಗ್ರೆಸ್ ಹೇಳಿದೆ.
ಪುರಿಯ ಶ್ರೀ ಗುಂಡಿಚಾ ದೇಗುಲದ ಬಳಿಕ ಭಾನುವಾರ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟಿದ್ದರು. ದೇಗುಲ ರಥ ಯಾತ್ರೆಯ ಅಂಗವಾಗಿ ಕಾರ್ಯಕ್ರಮಗಳು ನಡೆಯುತ್ತಿದ್ದವು. ದೇಗುಲದ ಮುಂಭಾದಲ್ಲಿ ನಿಲ್ಲಿಸಿದ್ದ ರಥದ ಬಳಿಕ ಮುಂಜಾನೆ 4.20ರ ಸುಮಾರಿಗೆ ಸಾವಿರಾರು ಮಂದಿ ಸೇರಿದ್ದರಿಂದ ಘಟನೆ ಸಂಭವಿಸಿತ್ತು.
ಸರ್ಕಾರದ ಅಸಮರ್ಪಕ ನಿರ್ವಹಣೆಯಿಂದ ಕಾಲ್ತುಳಿತ ಸಂಭವಿಸಿದ್ದು, ಹಾಲಿ ಜಿಲ್ಲಾ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ. ಅಲ್ಲದೆ ಅಭಿವೃದ್ಧಿ ಆಯುಕ್ತರಿಂದ ತನಿಖೆ ನಡೆಸುವ ಸರ್ಕಾರ ನಿರ್ಧಾರವನ್ನು ತಿರಸ್ಕರಿಸಿದೆ.
ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರಿಚಂದ್ರನ್ ನೇತೃತ್ವದ ಸತ್ಯಶೋಧನಾ ಸಮಿತಿ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದೆ. ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ತಂಡ ಭೇಟಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.