ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬೆಂಕಿ ಹಚ್ಚಿಕೊಂಡು ಸಾವಿಗೀಡಾದ ಕಾಲೇಜು ವಿದ್ಯಾರ್ಥಿನಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ಆಗ್ರಹಿಸಿ ಬುಧವಾರ ಪ್ರತಿಪಕ್ಷ ಬಿಜೆಡಿ (ಬಿಜು ಜನತಾದಳ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಪೊಲೀಸರ ಜೊತೆ ತಳ್ಳಾಟ–ನೂಕಾಟ ಉಂಟಾಗಿ ಇಬ್ಬರು ಮಾಜಿ ಸಚಿವರೂ ಸೇರಿದಂತೆ ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ.
ಪಿಎಂಜಿ ವೃತ್ತದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಬಿಜೆಡಿ ಮುಖಂಡರು ಮತ್ತು ಕಾರ್ಯಕರ್ತರು ಬ್ಯಾರಿಕೇಡ್ಗಳನ್ನು ತಳ್ಳಿ ಸಚಿವಾಲಯದತ್ತ ನುಗ್ಗಲು ಯತ್ನಿಸಿದರು. ಪೊಲೀಸರು ಪ್ರತಿಭಟನಕಾರರನ್ನು ತಡೆಯಲು ಯತ್ನಿಸಿದಾಗ ಹಿಂಸಾರೂಪಕ್ಕೆ ತಿರುಗಿತು.
ಪರಿಸ್ಥಿತಿ ಹತೋಟಿಗೆ ತರಲು ಜಲಫಿರಂಗಿ ಮತ್ತು ಅಶ್ರುವಾಯು ಸಿಡಿಸಬೇಕಾಯಿತು. ತಳ್ಳಾಟ–ನೂಕಾಟದಲ್ಲಿ ಮಾಜಿ ಸಚಿವರಾದ ಪ್ರಣಬ್ ಪ್ರಕಾಶ್ ದಾಸ್, ಪ್ರೀತಿ ರಂಜನ್ ಘರೈ ಸೇರಿ ಕೆಲವು ಕಾರ್ಯಕರ್ತರಿಗೆ ಗಾಯಗಳಾಗಿವೆ. ಪ್ರತಿಭಟನಕಾರರನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದರು.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಬಾಲಸೋರ್ ಕಾಲೇಜು ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.