ಶ್ರೀನಗರ: ಕೋವಿಡ್ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶುಕ್ರವಾರ ತಿಳಿಸಿದ್ದಾರೆ.
ಕಳೆದೊಂದು ವರ್ಷದಿಂದ ನಾನು ಈ ವೈರಸ್ನಿಂದ ತಪ್ಪಿಸಿಕೊಳ್ಳಲು ನನ್ನ ಕೈಲಾದಷ್ಟು ಪ್ರಯತ್ನಿಸಿದೆ ಆದರೆ ಅದು ಅಂತಿಮವಾಗಿ ನನಗೆ ತಗುಲಿಕೊಂಡಿದೆ. ಇಂದು ಮಧ್ಯಾಹ್ನ ನಡೆಸಿದ ಪರೀಕ್ಷೆಯಲ್ಲಿ ನನಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿನ ಯಾವುದೇ ಲಕ್ಷಣಗಳು ನನಗಿಲ್ಲ' ಎಂದು ಟ್ವೀಟ್ ಮಾಡಿದ್ದಾರೆ.
ಅವರ ತಂದೆ ಫಾರೂಕ್ ಅಬ್ದುಲ್ಲಾ ಅವರಿಗೂ ಕಳೆದ ವಾರ ಕೊರೊನಾ ವೈರಸ್ ಸೋಂಕು ತಗುಲಿತ್ತು. ಸದ್ಯ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ.
'ಟ್ವಿಟರ್ನಲ್ಲಿ ನನಗೆ ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನಾನು ತುಂಬಾ ಕೃತಜ್ಞನಾಗಿದ್ದೇನೆ. ಪ್ರತಿಯೊಬ್ಬರಿಗೂ ಪ್ರತ್ಯೇಕವಾಗಿ ಉತ್ತರಿಸಲು ಸಾಧ್ಯವಾಗದಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಮುಂದಿನ ಕೆಲವು ದಿನಗಳವರೆಗೆ ಈ ವೈರಸ್ ಅನ್ನು ಸೋಲಿಸುವತ್ತ ನಾನು ಗಮನ ಹರಿಸುತ್ತಿದ್ದೇನೆ ಮತ್ತು ಯುದ್ಧ ಗೆದ್ದ ನಂತರ ಮತ್ತೆ ಹಿಂತಿರುಗುತ್ತೇನೆ' ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಪ್ರಾಂತೀಯ ಅಧ್ಯಕ್ಷ ದೇವೇಂದರ್ ಸಿಂಗ್ ರಾಣಾ ಮತ್ತು ಪಕ್ಷದ ಇತರ ಹಿರಿಯ ಮುಖಂಡರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರೆ.
'ನಮ್ಮ ಪ್ರಾರ್ಥನೆಯು ನಮ್ಮ ಪ್ರೀತಿಯ ನಾಯಕನೊಂದಿಗಿದೆ ಮತ್ತು ಅವರ ಶೀಘ್ರ ಚೇತರಿಕೆಯನ್ನು ನಾವು ಬಯಸುತ್ತೇವೆ' ಎಂದು ಎನ್ಸಿ ಹಿರಿಯ ನಾಯಕರು ಪಕ್ಷದ ಜಮ್ಮುವಿನ ಪ್ರಧಾನ ಕಚೇರಿ ಶೇರ್-ಎ-ಕಾಶ್ಮೀರ ಭವನದಿಂದ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.