ಧರ್ಮಶಾಲಾ: ಇಲ್ಲಿನ ಕಾಂಗ್ರಾ ಜಿಲ್ಲೆಯ ಬೋಹ್ ಕಣಿವೆಯಲ್ಲಿ ಉಂಟಾದ ಭೂಕುಸಿತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಒಂಬತ್ತು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.
‘ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡವು (ಎನ್ಡಿಆರ್ಎಫ್) ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಸೋಮವಾರ ನಾಲ್ಕು ಜನರನ್ನು ರಕ್ಷಿಸಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಇತರರನ್ನು ಹೊರತೆಗೆಯಲು ಪ್ರಯತ್ನಿಸಲಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
‘ಬೋಹ್ ಕಣಿವೆಯಲ್ಲಿ ಉಂಟಾದ ಭೂಕುಸಿತದಲ್ಲಿ ಮನೆ ಕುಸಿದು ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಮನೆಯ ಅವಶೇಷಗಳಡಿ ಒಂಬತ್ತು ಮಂದಿ ಸಿಲುಕಿರುವ ಸಾಧ್ಯತೆ ಇದೆ’ ಎಂದ ಕಾಂಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಮುಕ್ತ್ ರಂಜನ್ ಮಾಹಿತಿ ನೀಡಿದ್ದಾರೆ.
ಬೋಹ್ ಕಣಿವೆ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು, ‘ಪ್ರವಾಹ ಮತ್ತು ಭೂಕುಸಿತದಲ್ಲಿ ಮನೆಗಳು ನಾಶವಾದವರಿಗೆ ರಾಜ್ಯ ಸರ್ಕಾರ ಹೊಸ ಮನೆಗಳನ್ನು ನಿರ್ಮಿಸಿಕೊಡಲಿದೆ’ ಎಂದು ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.