ಭೋಪಾಲ್: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ(ಎಂಎಸ್ಪಿ) ಕಾನೂನಿನ ಖಾತರಿ ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ರಾಜಸ್ಥಾನದ ಧೋಲಪುರದಿಂದ ಶನಿವಾರ ಮಧ್ಯಾಹ್ನ ಮಧ್ಯಪ್ರದೇಶಕ್ಕೆ ಪ್ರವೇಶ ಮಾಡಿತು. ಈ ವೇಳೆ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಮೊರೆನಾ ಜಿಲ್ಲೆಯ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ರಾಜ್ಯಕ್ಕೆ ಬರಮಾಡಿಕೊಂಡರು.
ಮೊರೆನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನಿನ ಖಾತರಿ ನೀಡಲಾಗುವುದು ಎಂದು ಭರವಸೆ ನೀಡಿದರು.
ಕೇಂದ್ರದ ಬಿಜೆಪಿ ಸರ್ಕಾರ ಹತ್ತು ಉದ್ಯಮಿಗಳ ₹ 16 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಆದರೆ ರೈತರು ಹೋರಾಟ ಮಾಡುತ್ತಿರುವ ಎಂಎಸ್ಪಿಗೆ ಕಾನೂನು ಖಾತರಿ ನೀಡಲು ನಿರಾಕರಿಸುತ್ತಿದೆ ಎಂದು ಕೇಂದ್ರದ ವಿರುದ್ಧ ಆರೋಪಿಸಿದರು.
ಇತರೆ ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರು ಸೇರಿದಂತೆ ದೇಶದ ಶೇ. 73ರಷ್ಟು ಜನರಿಗೆ ಸರ್ಕಾರ ಮತ್ತು ಇತರೆ ಕ್ಷೇತ್ರಗಳಲ್ಲಿ ಯಾವುದೇ ಪ್ರಾತಿನಿಧ್ಯವಿಲ್ಲ. ಜಾತಿ ಆಧಾರಿತ ಜನಗಣತಿ ಮಾಡುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಈ ಸಮುದಾಯಗಳ ಸಮಾನ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಬಹುದು. ಇದರಿಂದ ಈ ಸಮುದಾಯಗಳಿಗೆ ನ್ಯಾಯ ಸಿಗಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಮಧ್ಯಪ್ರದೇಶದ ಮೊರೇನಾ, ಗ್ವಾಲಿಯರ್, ಗುನಾ, ರಾಜಗಢ, ಶಾಜಾಪುರ, ಉಜ್ಜಯಿನಿ, ಧಾರ್ ಹಾಗೂ ರಟ್ಲಂ ಜಿಲ್ಲೆಗಳಲ್ಲಿ ನ್ಯಾಯಾ ಯಾತ್ರೆ ಸಾಗಲಿದ್ದು, ಮಾ. 6ಕ್ಕೆ ಮತ್ತೆ ರಾಜಸ್ಥಾನವನ್ನು ಪ್ರವೇಶಿಸಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.