ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸಂಪುಟದ ಸಭೆ ನಡೆಸದೇ ಏಕಪಕ್ಷೀಯವಾಗಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ್ದಾರೆ’ ಎಂದು ಆರೋಪಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ, ‘ಸಂಪುಟ ಸಭೆಯ ಅನುಮತಿ ಇಲ್ಲದೇ, ಕಾನೂನುಗಳನ್ನು ರಚಿಸುವುದು ಮತ್ತು ರದ್ದುಗೊಳಿಸುವುದು ಬಿಜೆಪಿ ಆಡಳಿತದಲ್ಲಿ ಮಾತ್ರ ಸಾಧ್ಯ’ ಎಂದು ಟೀಕಿಸಿದ್ದಾರೆ.
ಪ್ರಧಾನಿಯವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ ಒಂದು ದಿನದ ಬಳಿಕ ಟ್ವೀಟ್ ಮಾಡಿರುವ ಅವರು, ‘ಪ್ರಧಾನಿಯವರ ಈ ಘೋಷಣೆಯು ಮುತ್ಸದ್ದಿತನದ ನಡೆ ಎಂದು ಗೃಹ ಸಚಿವರು ಶ್ಲಾಘಿಸಿದ್ದಾರೆ. ಬಿಜೆಪಿ ಅಧ್ಯಕ್ಷರು, ಪ್ರಧಾನಿ ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ರಕ್ಷಣಾ ಸಚಿವರು, ರೈತರ ಕಲ್ಯಾಣಕ್ಕಾಗಿ ಪ್ರಧಾನಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಆದರೆ ಈ ಮಹಾನ್ ನಾಯಕರು ಕಳೆದ ಹದಿನೈದು ತಿಂಗಳು ಎಲ್ಲಿದ್ದರು ಮತ್ತು ಅವರ ಬುದ್ಧಿವಂತ ಸಲಹೆಗಳು ಎಲ್ಲಿದ್ದವು?’ ಎಂದು ಪ್ರಶ್ನಿಸಿದ್ದಾರೆ.
‘ಪ್ರಧಾನಿಯವರು ಸಚಿವ ಸಂಪುಟದ ಸಭೆ ನಡೆಸದೇ ಈ ಘೋಷಣೆ ಮಾಡಿದ್ದನ್ನು ನೀವು ಗಮನಿಸಿದ್ದೀರಾ’ ಎಂದೂ ಅವರು ಸಚಿವರನ್ನು ಕೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.