ADVERTISEMENT

ಜಗತ್ತಿಗೆ ಭಾರತದ ಧೈರ್ಯ ಪ್ರದರ್ಶನ; ಆಪರೇಷನ್‌ ಸಿಂಧೂರದ ಬಗ್ಗೆ ಮೋದಿ 'ಮನದ ಮಾತು'

ಪಿಟಿಐ
Published 25 ಮೇ 2025, 10:49 IST
Last Updated 25 ಮೇ 2025, 10:49 IST
ಮನದ ಮಾತು ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ
ಮನದ ಮಾತು ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ    

ಟ್ವಿಟರ್ ಚಿತ್ರ ( ಸಂಗ್ರಹ) 

ನವದೆಹಲಿ: ಆಪರೇಷನ್‌ ಸಿಂಧೂರ ಕೇವಲ ಸಶಸ್ತ್ರ ಪಡೆಗಳ ಕಾರ್ಯಾಚರಣೆಯಲ್ಲ. ಬದಲಾಗಿ ಜಗತ್ತಿಗೆ ಭಾರತದ ದೃಢನಿಶ್ಚಯ, ಧೈರ್ಯ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶದ ಶಕ್ತಿಯನ್ನು ಪ್ರತಿಬಿಂಬಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಿಳಿಸಿದ್ದಾರೆ.

ಮಾಸಿಕ ರೆಡಿಯೊ ಕಾರ್ಯಕ್ರಮ ‘ಮನದ ಮಾತು‘ವಿನಲ್ಲಿ (ಮನ್‌ ಕಿ ಬಾತ್) ಮಾತನಾಡಿದ ಮೋದಿ, ‘ಇಂದು ಇಡೀ ದೇಶವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದೆ, ಭಯೋತ್ಪಾದನೆಯ ವಿರುದ್ಧದ ಜಾಗತಿಕ ಹೋರಾಟಕ್ಕೆ ಆಪರೇಷನ್ ಸಿಂಧೂರ ಹೊಸ ತಿರುವು ನೀಡಿದೆ ಎಂದು ಹೇಳಿದ್ದಾರೆ.

ADVERTISEMENT

ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಸಶಸ್ತ್ರ‍ ಪಡೆ ನಡೆಸಿದ ಕಾರ್ಯಾಚರಣೆಯು ಅಸಾಧಾರಣ ಎಂದು ಶ್ಲಾಘಿಸಿದ್ದಾರೆ.

ಆಪರೇಷನ್ ಸಿಂಧೂರ ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರಣವಾಗಿದೆ. ಕಾರ್ಯಾಚರಣೆಯ ಯಶಸ್ಸಿನ ನಂತರ, ಸಾಮಾಜಿಕ ಮಾಧ್ಯಮದಲ್ಲಿ ದೇಶಭಕ್ತಿಯ ಕವಿತೆಗಳಿಂದ ಹಿಡಿದು ಮಕ್ಕಳ ರಚಿಸಿದ ವರ್ಣಚಿತ್ರಗಳು, ಬೃಹತ್ ತಿರಂಗ ಯಾತ್ರೆಗಳು ಯೋಧರ ಶೌರ್ಯ, ಸಾಹಸಗಳ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಮೋದಿ ಹೇಳಿದ್ದಾರೆ.

ಕಟಿಹಾರ್ ಮತ್ತು ಕುಶಿನಗರದಂತಹ ನಗರಗಳಲ್ಲಿ ಪೋಷಕರು ತಮ್ಮ ನವಜಾತ ಶಿಶುಗಳಿಗೆ (ಸೇನಾ) ಕಾರ್ಯಾಚರಣೆಯ ಗೌರವಾರ್ಥವಾಗಿ ‘ಸಿಂಧೂರ‘ ಎಂದು ಹೆಸರಿಟ್ಟಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

ಆತ್ಮನಿರ್ಭರ ಭಾರತದ ಸಂಕಲ್ಪದೊಂದಿಗೆ ಸ್ವದೇಶಿ ರಕ್ಷಣಾ ಸಾಮರ್ಥ್ಯವು ಸಹ ಸೇನಾ ಕಾರ್ಯಾಚರಣೆಯ ಯಶಸ್ಸಿಗೆ ಕಾರಣ ಎಂದು ಪ್ರಧಾನಿ ಹೇಳಿದ್ದಾರೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್‌ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.

ಭಾರತವು ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್‌ಗೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್‌. ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.