ADVERTISEMENT

ವಂದನಾ ನಿರ್ಣಯದ ಮೇಲೆ ಚರ್ಚೆ: AAP, BRS ಹೊರತುಪಡಿಸಿ ಉಳಿದ ವಿರೋಧ ಪಕ್ಷಗಳು ಭಾಗಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಫೆಬ್ರುವರಿ 2023, 7:06 IST
Last Updated 7 ಫೆಬ್ರುವರಿ 2023, 7:06 IST
   

ನವದೆಹಲಿ: ಆಮ್‌ ಆದ್ಮಿ ಪಕ್ಷ (ಎಎಪಿ) ಹಾಗೂ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷಗಳನ್ನು ಹೊರತುಪಡಿಸಿ ಉಳಿದ ವಿರೋಧ ಪಕ್ಷಗಳು, ಸಂಸತ್‌ನಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿವೆ.

ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಂಗಳವಾರ ನಡೆದ 15 ಪ್ರತಿಪಕ್ಷಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ, ಎಎಪಿ ಹಾಗೂ ಬಿಆರ್‌ಎಸ್‌ ಪಕ್ಷಗಳು, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಅದಾನಿ ಸಮೂಹಕ್ಕೆ ಸಂಬಂಧಿಸಿದ ವಿಚಾರಗಳನ್ನು ಸೇರಿಸಬಾರದು. ಬದಲಾಗಿ ಪ್ರತ್ಯೇಕ ಸಮಯಾವಕಾಶ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮುಂದುವರಿಸಿವೆ.

ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಿದ್ದ ಎಎಪಿಯ ಸಂಜಯ್‌ ಸಿಂಗ್‌ ಅವರು, ಉಳಿದ ಪಕ್ಷಗಳ ನಿರ್ಧಾರವನ್ನು ತಮ್ಮ ಪಕ್ಷ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಸಭೆಯಲ್ಲಿ ಬಿಆರ್‌ಎಸ್‌ ನಾಯಕರು ಭಾಗವಹಿಸಿರಲಿಲ್ಲ. ಆದರೆ, ತಾವು ಸಹ ಎಎಪಿಯದ್ದೇ ದೃಷ್ಟಿಕೋನ ಹೊಂದಿದ್ದು, ಸಂಸತ್‌ನಲ್ಲಿ ಪ್ರತಿಭಟನೆ ಮುಂದುವರಿಸುವುದಾಗಿ ಆ ಪಕ್ಷದ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.