ADVERTISEMENT

ವಿಪಕ್ಷಗಳಿಂದ ಕರಾಳ ದಿನಾಚರಣೆ

ಕಾಂಗ್ರೆಸ್‌ ನೇತೃತ್ವದ ಪ್ರತಿಭಟನೆಗೆ ಜತೆಯಾದ ಟಿಎಂಸಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 19:34 IST
Last Updated 27 ಮಾರ್ಚ್ 2023, 19:34 IST
ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿವಿಧ ವಿರೋಧ ಪಕ್ಷಗಳ ಸಂಸದರು ಕಪ್ಪುಬಟ್ಟೆ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು –ಪಿಟಿಐ ಚಿತ್ರ
ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿವಿಧ ವಿರೋಧ ಪಕ್ಷಗಳ ಸಂಸದರು ಕಪ್ಪುಬಟ್ಟೆ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು –ಪಿಟಿಐ ಚಿತ್ರ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರವು ದೇಶದ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುತ್ತಿದೆ ಎಂದು
ಆರೋಪಿಸಿ ಎಲ್ಲಾ ವಿರೋಧ ಪಕ್ಷಗಳು ಸಂಸತ್ತಿನ ಒಳಗೆ ಮತ್ತು ಸಂಸತ್ತಿನ ಹೊರಗೆ ಕರಾಳ ದಿನವನ್ನು ಆಚರಿಸಿ
ದವು. ಕಪ್ಪು ಬಟ್ಟೆ ಧರಿಸಿದ್ದ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಎರಡೂ ಸದನಗಳಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಸಂಸದರು ಕಾಗದಗಳನ್ನು ಹರಿದು, ಸ್ಪೀಕರ್ ಅವರ ಕುರ್ಚಿಯತ್ತ ತೂರಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಗದ್ದಲ ಮುಂದುವರಿಯಿತು. ಹೀಗಾಗಿ ಕಲಾಪವನ್ನು ಮಧ್ಯಾಹ್ನದವರೆಗೂ ಮುಂದೂಡಲಾಯಿತು. ಮಧ್ಯಾಹ್ನದ ನಂತರವೂ ಕಲಾಪ ನಡೆದದ್ದು ಕೇವಲ ಏಳು ನಿಮಿಷ. ರಾಜ್ಯಸಭೆಯಲ್ಲೂ ಪ್ರತಿಭಟನೆ ನಡೆದ ಕಾರಣ, ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಗಿತ್ತು. ಮಧ್ಯಾಹ್ನವೂ ಯಾವುದೇ ಕಲಾಪ ನಡೆಯಲಿಲ್ಲ.

ಕಲಾಪ ಮುಂದೂಡಿದ ನಂತರ ಗಾಂಧಿ ಪ್ರತಿಮೆ ಬಳಿಯಿಂದ ವಿಜಯ ಚೌಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅದಾನಿ ಸಮೂಹದ ಷೇರಿನ ಮೌಲ್ಯ ತಿರುಚಿದ ಆರೋಪವನ್ನು ಜಂಟಿ ಸಂಸದೀಯ ಸಮಿತಿ ತನಿಖೆಗೆ ಒಪ್ಪಿಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿದವು.

ADVERTISEMENT

ಜತೆಗೆ ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹಗೊಳಿಸಿದ್ದನ್ನೂ ಖಂಡಿಸಿದವು.

ಎಲ್ಲಾ ವಿರೋಧ ಪಕ್ಷಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು. ಕಾಂಗ್ರೆಸ್‌ ನೇತೃತ್ವದಲ್ಲಿ ಈವರೆಗೆ ನಡೆದಿದ್ದ ಪ್ರತಿಭಟನೆಗಳಿಂದ ದೂರ ಉಳಿದಿದ್ದ ಟಿಎಂಸಿ, ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.