ADVERTISEMENT

ಜಂತರ್‌–ಮಂತರ್‌ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ವಿರೋಧ ಪಕ್ಷಗಳ ಬೆಂಬಲ

ಪಿಟಿಐ
Published 6 ಆಗಸ್ಟ್ 2021, 8:02 IST
Last Updated 6 ಆಗಸ್ಟ್ 2021, 8:02 IST
ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದೇಶದ ವಿವಿಧ ರೈತರ ಸಂಘಟನೆಗಳು ನವದೆಹಲಿಯ ಜಂತರ್‌–ಮಂತರ್‌ನಲ್ಲಿ ಬುಧವಾರ ನಡೆಸಿದ ‘ಕಿಸಾನ್ ಸಂಸತ್‌‘ (ಸಂಗ್ರಹ ಚಿತ್ರ)
ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದೇಶದ ವಿವಿಧ ರೈತರ ಸಂಘಟನೆಗಳು ನವದೆಹಲಿಯ ಜಂತರ್‌–ಮಂತರ್‌ನಲ್ಲಿ ಬುಧವಾರ ನಡೆಸಿದ ‘ಕಿಸಾನ್ ಸಂಸತ್‌‘ (ಸಂಗ್ರಹ ಚಿತ್ರ)   

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಲ್ಲಿನ ಜಂತರ್‌ ಮಂತರ್‌ನಲ್ಲಿ ನಡೆಸುತ್ತಿರುವ ‘ಕಿಸಾನ್‌ ಸಂಸತ್‌‘ನಲ್ಲಿ, ಸಂಸತ್ತಿನ 14 ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸುವುದರ ಜತಗೆ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದಂತೆ 14 ವಿರೋಧ ಪಕ್ಷಗಳ ನಾಯಕರು ಸಭೆ ಸೇರಿ, ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನಿರ್ಧಾರ ಕೈಗೊಂಡರು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ರೈತರ ‘ಕಿಸಾನ್‌ ಸಂಸತ್‌‘ನಲ್ಲಿ ಭಾಗವಹಿಸಲಿದ್ದಾರೆ. ಹೊಸ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂಬ ರೈತರ ಬೇಡಿಕೆಯನ್ನು ಬೆಂಬಲಿಸುತ್ತಾರೆ ಎಂದು ತಿಳಿಸಿದರು.

ADVERTISEMENT

ವಿರೋಧ ಪಕ್ಷಗಳಾದಕಾಂಗ್ರೆಸ್‌, ಡಿಎಂಕೆ, ಟಿಎಂಸಿ, ಎನ್‌ಸಿಪಿ,ಶಿವಸೇನಾ, ಆರ್‌ಜೆಡಿ, ಎಸ್‌ಪಿ, ಸಿಪಿಐಎಂ, ಎಎಪಿ, ಸಿಪಿಐ, ಐಯುಎಂಎಲ್‌, ಆರ್‌ಎಸ್‌ಪಿ, ಎನ್‌ಸಿ ಮತ್ತು ಎಲ್‌ಜೆಡಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸಭೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಂಬಂಧ ಯಾವ ರೀತಿಯ ಕಾರ್ಯತಂತ್ರ ರೂಪಿಸಬೇಕೆಂಬುದರ ಕುರಿತು ಚರ್ಚೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.