ನವದೆಹಲಿ: ‘ಜನರನ್ನು ದಬ್ಬಾಳಿಕೆಯಿಂದ ಮುಕ್ತಗೊಳಿಸಲು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಎಲ್ಲಾ ವಿರೋಧ ಪಕ್ಷಗಳು ಒಗ್ಗೂಡಬೇಕು’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.
‘ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಜಂಟಿಯಾಗಿ ಸ್ಪರ್ಧಿಸುವ ಹಾಗೂ ಮಾಯಾವತಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸುವ ಕೋರಿಕೆಯನ್ನು ಬಿಎಸ್ಪಿಗೆ ಕಾಂಗ್ರೆಸ್ ನೀಡಿತ್ತು’ ಎನ್ನುವ ರಾಹುಲ್ ಗಾಂಧಿ ಹೇಳಿಕೆಯನ್ನು ಖರ್ಗೆ ಸಮರ್ಥಿಸಿಕೊಂಡರು.
‘ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ಜನರು ಇಂದು ಬಸವಳಿದಿದ್ದಾರೆ. ಉದ್ಯೋಗವೂ ಇಲ್ಲ. ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನೂ ಆರ್ಎಸ್ಎಸ್ ತನ್ನ ವಶಕ್ಕೆ ತೆಗೆದುಕೊಳ್ಳುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವಕ್ಕೆ ಏನಾಗಬಹುದು? ಬಾಬಾಸಾಹೇಬರ ಸಂವಿಧಾನವನ್ನು ಯಾರು ರಕ್ಷಿಸುತ್ತಾರೆ’ ಎಂದು ಖರ್ಗೆ ಆತಂಕ ವ್ಯಕ್ತಪಡಿಸಿದರು.
‘ಬಿಜೆಪಿಯ ವಿರುದ್ಧದ ಹೋರಾಟದಲ್ಲಿ ಎಲ್ಲಾ ವಿರೋಧ ಪಕ್ಷಗಳೂ ಒಗ್ಗೂಡಿ, ಜನರಿಗೆ ಸ್ವಲ್ಪಮಟ್ಟಿನ ಪರಿಹಾರವನ್ನಾದರೂ ದೊರೆಯುವಂತೆ ಮಾಡಬೇಕಿದೆ’ ಎಂದು ಅವರು ಹೇಳಿದರು.
‘ಉತ್ತರಪ್ರದೇಶದಲ್ಲಿ ಬಿಜೆಪಿಯು ತನ್ನ ಅಧಿಕಾರದ ದುರಹಂಕಾರದಲ್ಲಿ ಜನರ ಮೇಲೆ ಮಾಡುತ್ತಿರುವ ದೌರ್ಜನ್ಯವನ್ನು ಕೊನೆಗಾಣಿಸಲು ಕಾಂಗ್ರೆಸ್ ಮತ್ತು ಬಿಎಸ್ಪಿ ಒಟ್ಟಾಗಿ ಹೋರಾಡಬೇಕು. ಬಿಜೆಪಿ ಸರ್ಕಾರದ ದಬ್ಬಾಳಿಕೆಯಿಂದ ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಮತ್ತು ಶೋಷಿತರು ಹೆಚ್ಚು ತೊಂದರೆಗೊಳಗಾಗಿದ್ದಾರೆ’ ಎಂದೂ ಅವರು ಹೇಳಿದರು.
‘ಕಾಂಗ್ರೆಸ್ ಪಕ್ಷವು, ಮಾಯಾವತಿ ಅವರನ್ನು ಕಾಂಗ್ರೆಸ್ ಜೊತೆಗೆ ಸೇರಿ ಬಿಜೆಪಿ ವಿರುದ್ಧದ ಒಕ್ಕೂಟವನ್ನು ಮುನ್ನಡೆಸುವಂತೆ ಒತ್ತಾಯಿಸಿತ್ತು. ಆದರೆ, ಅದಕ್ಕೆ ಅವರು ಒಪ್ಪಲಿಲ್ಲ. ಕಾರಣಗಳೇನೇ ಇರಲಿ. ಆದರೆ, ಶನಿವಾರ ರಾಹುಲ್ ಗಾಂಧಿ ಅವರು ಈ ಕುರಿತು ತಮ್ಮ ಹೇಳಿಕೆಯನ್ನು ಪುನರಾವರ್ತಿಸಿದರಷ್ಟೇ’ ಎಂದೂ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡರು.
ಆದರೆ, ಕಾಂಗ್ರೆಸ್ನ ಆಹ್ವಾನದ ಕುರಿತ ಹೇಳಿಕೆಯನ್ನು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ನಿರಾಕರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.