ADVERTISEMENT

ದೇಶದ್ರೋಹ ಕಾನೂನು: ಕೇಂದ್ರಕ್ಕೆ ಕಾಲಾವಕಾಶ ನೀಡಿದ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2022, 14:32 IST
Last Updated 31 ಅಕ್ಟೋಬರ್ 2022, 14:32 IST
ಸುಪ್ರೀಂ ಕೋರ್ಟ್‌ 
ಸುಪ್ರೀಂ ಕೋರ್ಟ್‌    

ನವದೆಹಲಿ: ದೇಶದ್ರೋಹಕ್ಕೆ ಸಂಬಂಧಿಸಿದ ಸೆಕ್ಷನ್‌ 124(ಎ)ಗೆ ಈ ವರ್ಷದ ಮೇ 11ರಂದು ತಡೆ ನೀಡಿದ್ದ ಸುಪ್ರೀಂ ಕೋರ್ಟ್‌, ಬ್ರಿಟಿಷರ ಕಾಲದ ಈ ಸೆಕ್ಷನ್‌ ಕುರಿತು ಮರುಪರಿಶೀಲನೆ ನಡೆಸಲು ಕೇಂದ್ರ ಸರ್ಕಾರಕ್ಕೆ ಸೋಮವಾರ ಹೆಚ್ಚುವರಿ ಕಾಲಾವಕಾಶ ಮಂಜೂರು ಮಾಡಿದೆ.

‘ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ಏನಾದರೂ ತೀರ್ಮಾನ ತೆಗೆದುಕೊಳ್ಳಬಹುದು. ಹೀಗಾಗಿ ಹೆಚ್ಚುವರಿ ಸಮಯಾವಕಾಶ ನೀಡಿ’ ಎಂದು ಅಟಾರ್ನಿ ಜನರಲ್‌ ಆರ್‌.ವೆಂಕಟರಮಣಿ ಅವರು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌, ನ್ಯಾಯಮೂರ್ತಿಗಳಾದ ಎಸ್‌.ರವೀಂದ್ರ ಭಟ್‌ ಮತ್ತು ಬೇಲಾ ಎಂ.ತ್ರಿವೇದಿ ಅವರನ್ನೊಳಗೊಂಡ ನ್ಯಾಯಾಪೀಠಕ್ಕೆ ಮನವಿ ಮಾಡಿದರು.

‘ನ್ಯಾಯಾಲಯ ಈಗಾಗಲೇ ಮಧ್ಯಂತರ ತೀರ್ಪು ಪ್ರಕಟಿಸಿರುವುದರಿಂದ ಈ ವಿಚಾರವಾಗಿ ಆತಂಕಪಡುವ ಅಗತ್ಯವೇನಿಲ್ಲ. ಸಂಸತ್ತಿನ ಚಳಿಗಾಲದ ಅಧಿವೇಶನದ ಬಳಿಕ ಈ ಕುರಿತ ವಿಚಾರಣೆ ನಡೆಸುವುದು ಸೂಕ್ತ’ ಎಂದೂ ಅವರು ಪೀಠಕ್ಕೆ ತಿಳಿಸಿದರು.

ADVERTISEMENT

ಅವರ ಮನವಿ ಪುರಸ್ಕರಿಸಿದ ನ್ಯಾಯಪೀಠವು 2023ರ ಜನವರಿಗೆ ವಿಚಾರಣೆ ಮುಂದೂಡಿತು.

124 (ಎ) ಸೆಕ್ಷನ್‌ ಅಡಿಯಲ್ಲಿ ಹೊಸದಾಗಿ ಯಾವುದೇ ಎಫ್‌ಐಆರ್‌ ದಾಖಲಿಸದಂತೆ ಹಾಗೂ ಈಗಾಗಲೇ ದಾಖಲಾಗಿರುವ ಪ್ರಕರಣಗಳ ತನಿಖೆಯನ್ನು ತಡೆಹಿಡಿಯುವಂತೆ ನಿರ್ದೇಶನ ನೀಡಲಾಗಿದೆಯೇ ಎಂದು ನ್ಯಾಯಪೀಠವು ಕೇಂದ್ರ ಸರ್ಕಾರವನ್ನು ಕೇಳಿತು.

‘ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಈ ಸಂಬಂಧ ನಿರ್ದೇಶನ ನೀಡಲಾಗಿದೆ’ ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ನ್ಯಾಯಪೀಠಕ್ಕೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.