ADVERTISEMENT

ದೆಹಲಿ | ಆದೇಶ ಮರುಪರಿಶೀಲನೆ ಕೋರಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಅರ್ಜಿ

ಪಿಟಿಐ
Published 20 ಮೇ 2023, 12:10 IST
Last Updated 20 ಮೇ 2023, 12:10 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿ ಮೇ 11ರಂದು ನೀಡಿರುವ ತನ್ನ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದೆ.

ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣವನ್ನು ಲೆಫ್ಟಿನೆಂಟ್‌ ಗವರ್ನರ್‌ ಅವರಿಗೆ ನೀಡಿ ಶುಕ್ರವಾರ ಸುಗ್ರೀವಾಜ್ಞೆ ಹೊರಡಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ.

‘ಕೇಂದ್ರ ಮಂಡಿಸಿದ್ದ ಅಹವಾಲನ್ನು ಪರಿಗಣಿಸುವಲ್ಲಿ ಸುಪ್ರೀಂಕೋರ್ಟ್‌ನ ತೀರ್ಪು ವಿಫಲವಾಗಿದೆ. ದೋಷಗಳಿರುವುದು ಸ್ಪಷ್ಟವಾಗುತ್ತದೆ’ ಎಂದು ಸಾಲಿಸಿಟರ್‌ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯಲ್ಲಿ ಹೇಳಲಾಗಿದೆ.

ADVERTISEMENT
ಅರವಿಂದ ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಸುಸೂತ್ರವಾಗಿ ಕಾರ್ಯ ನಿರ್ವಹಿಸುವುದು ಕೇಂದ್ರಕ್ಕೆ ಇಷ್ಟವಿಲ್ಲ ಎಂಬುದು ಅದು ಹೊರಡಿಸಿರುವ ಈ ಸುಗ್ರೀವಾಜ್ಞೆಯಿಂದ ಸ್ಪಷ್ಟವಾಗುತ್ತದೆ.
ಸಂಜಯ್ ಸಿಂಗ್, ಎಎಪಿಯ ರಾಜ್ಯಸಭಾ ಸಂಸದ

ಇನ್ನೊಂದೆಡೆ, ಸುಗ್ರೀವಾಜ್ಞೆ ಹೊರಡಿಸಿರುವ ಕೇಂದ್ರದ ನಡೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗುವುದಾಗಿ ಆಡಳಿತಾರೂಢ ಪಕ್ಷ ಎಎಪಿ ಹೇಳಿದೆ. ಇದರೊಂದಿಗೆ ಎಎಪಿ ಹಾಗೂ ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಏರ್ಪಡಲಿದೆ.

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಆರು ವಾರಗಳ ಕಾಲ ಸುಪ್ರೀಂಕೋರ್ಟ್‌ ಕಲಾಪಗಳು ಇರುವುದಿಲ್ಲ . ಇದೇ ಸಮಯವನ್ನು ನೋಡಿಯೇ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಸುಗ್ರೀವಾಜ್ಞೆ ಹೊರಡಿಸಿದೆ.
ಆತಿಶಿ ಮಾರ್ಲೇನಾ, ದೆಹಲಿ ಶಿಕ್ಷಣ ಸಚಿವೆ

ಪೊಲೀಸ್‌, ಸಾರ್ವಜನಿಕ ಸುವ್ಯವಸ್ಥೆ ಹಾಗೂ ಭೂಮಿ ಹೊರತುಪಡಿಸಿ, ಅಧಿಕಾರಿಗಳ ನೇಮಕ ಹಾಗೂ ವರ್ಗಾವಣೆ ಸೇರಿದಂತೆ ಉಳಿದ ಅಧಿಕಾರಗಳನ್ನು ದೆಹಲಿ ಸರ್ಕಾರಕ್ಕೆ ನೀಡಿ ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. 

ಸುಗ್ರೀವಾಜ್ಞೆಯಲ್ಲಿ ಏನಿದೆ?

ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯಂತೆ, ‘ರಾಷ್ಟ್ರ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರ’ವನ್ನು ರಚಿಸಲಾಗುತ್ತದೆ. ದೆಹಲಿ ಸರ್ಕಾರದ ಮುಖ್ಯಮಂತ್ರಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಮುಖ್ಯ ಕಾರ್ಯದರ್ಶಿ, ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಅವರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಪ್ರಾಧಿಕಾರ ಕೈಗೊಳ್ಳುವ ನಿರ್ಣಯವನ್ನು ಮತಕ್ಕೆ ಹಾಕಬೇಕು. ಬಹುಮತದ ಆಧಾರದ ಮೇಲೆ ನಿರ್ಣಯವನ್ನು ಅಂಗೀಕರಿಸಬೇಕು. ಒಂದು ವೇಳೆ ಯಾವುದೇ ವಿಷಯ ಕುರಿತು ಭಿನ್ನಾಭಿಪ್ರಾಯ ಕಂಡುಬಂದಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಸುಗ್ರೀವಾಜ್ಞೆಯಲ್ಲಿ ಹೇಳಲಾಗಿದೆ.

‘ಕೇಂದ್ರದ ಈ ಕ್ರಮ ಅಸಾಂವಿಧಾನಿಕ. ಸುಪ್ರೀಂಕೋರ್ಟ್‌, ದೆಹಲಿ ಸರ್ಕಾರಕ್ಕೆ ನೀಡಿರುವ ಅಧಿಕಾರವನ್ನು ಕಸಿಯುವ ಯತ್ನ ಇದಾಗಿದೆ’ ಎಂದು ಎಎಪಿ ಆಕ್ರೋಶ ವ್ಯಕ್ತಪಡಿಸಿದೆ.

ಸಂಜಯ ಸಿಂಗ್
ಆತಿಶಿ ಮಾರ್ಲೇನಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.