ಪುಣೆ: ಮಹಾರಾಷ್ಟ್ರದ 10ಕ್ಕೂ ಹೆಚ್ಚು ಸಚಿವರು ಮತ್ತು 20 ಶಾಸಕರಿಗೆ ಕೋವಿಡ್-19 ದೃಢಪಟ್ಟಿದೆ ಎಂದು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಶನಿವಾರ ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ಇದೇ ರೀತಿ ಮುಂದುವರಿದರೆ ಕಠಿಣ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 24 ಗಂಟೆಗಳಲ್ಲಿ 8,067 ಹೊಸ ಪ್ರಕರಣಗಳು ವರದಿಯಾಗಿದ್ದು, ಗುರುವಾರಕ್ಕೆ ಹೋಲಿಸಿದರೆ ಶೇ 50ರಷ್ಟು ಹೆಚ್ಚಳವಾಗಿದೆ ಎಂದು ಅಜಿತ್ ತಿಳಿಸಿದ್ದಾರೆ.
'ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸಭೆ ಅಧಿವೇಶನವನ್ನು ಮೊಟಕುಗೊಳಿಸಿದ್ದೇವೆ. 10ಕ್ಕೂ ಹೆಚ್ಚು ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರಿಗೆ ಕೋವಿಡ್ ದೃಢಪಟ್ಟಿದೆ. ಪ್ರತಿಯೊಬ್ಬರಿಗೂ ಹೊಸ ವರ್ಷ, ಹುಟ್ಟುಹಬ್ಬ ಮತ್ತು ಇತರೆ ಸಂದರ್ಭಗಳಲ್ಲಿ ಸಂಭ್ರಮಾಚರಿಸಬೇಕೆನ್ನುವ ಹಂಬಲವಿರುತ್ತದೆ. ಆದರೆ ಕೊರೊನಾ ವೈರಸ್ನ ಹೊಸ ರೂಪಾಂತರ (ಓಮೈಕ್ರಾನ್) ವೇಗವಾಗಿ ಹರಡುತ್ತದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ಎಚ್ಚರಿಕೆಯಿಂದಿರಬೇಕು. ಈ ಬಗ್ಗೆ ಪ್ರಧಾನಿ ಮೋದಿ ಮನವಿ ಮಾಡಿದ್ದು, ಈಗಾಗಲೇ ಕೆಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಮಹಾರಾಷ್ಟ್ರದ ಮುಂಬೈ ಮತ್ತು ಪುಣೆಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ' ಎಂದು ಸುದ್ದಿಗಾರರಿಗೆ ತಿಳಿಸಿದರು.
ಕಠಿಣ ನಿರ್ಬಂಧಗಳನ್ನು ವಿಧಿಸುವ ಕುರಿತು ಮಾತನಾಡಿದ ಅವರು, 'ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಸರ್ಕಾರ ಗಮನ ಹರಿಸಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳು ಹೆಚ್ಚಾದರೆ ಕಠಿಣ ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಇದನ್ನು ತಪ್ಪಿಸಬೇಕೆಂದರೆ ಪ್ರತಿಯೊಬ್ಬರು ನಿಯಮಾವಳಿಗಳನ್ನು ಪಾಲಿಸಬೇಕಾಗುತ್ತದೆ' ಎಂದು ಹೇಳಿದ್ದಾರೆ.
ಕಳೆದ 12 ದಿನಗಳಿಂದೀಚೆಗೆ ಮಹಾರಾಷ್ಟ್ರದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಹಾಗಾಗಿ ಗುರುವಾರ ರಾತ್ರಿ ನೂತನ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.