ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲ
ಪತ್ತನಂತಿಟ್ಟ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಯಾತ್ರೆಯನ್ನು ಸುರಕ್ಷಿತ ಮತ್ತು ಸುಸಜ್ಜಿತಗೊಳಿಸುವುದಕ್ಕಾಗಿ ಶಬರಿಮಲೆಯಲ್ಲಿ ₹1,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ‘ಜಾಗತಿಕ ಅಯ್ಯಪ್ಪ ಸಂಗಮ’ದಲ್ಲಿ ಶನಿವಾರ ಘೋಷಿಸಿದರು.
ಜಾಗತಿಕ ಅಯ್ಯಪ್ಪ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸನ್ನಿಧಾನಂ, ಪಂಪಾ ಮತ್ತು ಯಾತ್ರೆಯ ಮಾರ್ಗದ ಅಭಿವೃದ್ಧಿಯ ವಿವಿಧ ಹಂತಗಳಿಗೆ ಒಟ್ಟು ₹1033.62 ಕೋಟಿ ಖರ್ಚು ಮಾಡಲಾಗುವುದು. ಈ ಅಭಿವೃದ್ಧಿ ಕಾರ್ಯಗಳು 2039ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.
ಭಕ್ತರಿಗೆ ಅನುಕೂಲವಾಗುವಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 2025ರಿಂದ 2030ರ ವೇಳೆಗೆ ₹300 ಕೋಟಿಗೂ ಹೆಚ್ಚು ಖರ್ಚು ಮಾಡಲಾಗುವುದು.
ಸಮಾವೇಶಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದರ ಕುರಿತು ಮಾತನಾಡಿದ ಅವರು ‘ಭಕ್ತರ ವೇಷದಲ್ಲಿರುವ ಕೆಲ ವ್ಯಕ್ತಿಗಳು ಸುಪ್ರೀಂ ಕೋರ್ಟ್ವರೆಗೂ ಹೋಗಿ ಸಮಾವೇಶಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ಆದರೆ ಅಂಥ ಯತ್ನಗಳನ್ನು ಸುಪ್ರೀಂ ಕೋರ್ಟ್ ತಡೆಯಿತು’ ಎಂದು ಹೇಳಿದರು.
ತನ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ ‘ತಿರುವಾಂಕೂರು ದೇವಸ್ವಂ ಮಂಡಳಿ’ಯು (ಟಿಡಿಬಿ) ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಪಂಪಾದಲ್ಲಿ ‘ಜಾಗತಿಕ ಅಯ್ಯಪ್ಪ ಸಂಗಮ’ವನ್ನು ಆಯೋಜಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.