ಹೈದರಾಬಾದ್: ‘ಪ್ರವಾದಿ ಮಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಮುಂದಿನ ದಿನಗಳಲ್ಲಿ ದೆಹಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಸ್ಪರ್ಧಿಸಬಹುದು’ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವ್ಯಂಗ್ಯವಾಡಿದ್ದಾರೆ.
ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಓವೈಸಿ, ‘ಬಿಜೆಪಿಯವರು ನೂಪುರ್ ಶರ್ಮಾ ಅವರನ್ನು ಮುಂದಿನ ಆರುತಿಂಗಳಲ್ಲಿ ದೊಡ್ಡ ನಾಯಕಿಯನ್ನಾಗಿ ಮಾಡಲಿದ್ದಾರೆ’ ಎಂದು ಗುಡುಗಿದ್ದಾರೆ.
‘ಮುಸ್ಲಿಮರನ್ನು ನಿಂದಿಸುವವರಿಗೆ ಬಿಜೆಪಿ ಪಕ್ಷದಲ್ಲಿ ದೊಡ್ಡ ಹುದ್ದೆಗಳು ಸಿಗುತ್ತವೆ. ಹಾಗಾಗಿ ನೂಪುರ್ ಶರ್ಮಾ ಅವರನ್ನು ದೆಹಲಿಯ ಸಿಎಂ ಅಭ್ಯರ್ಥಿಯನ್ನಾಗಿ ಮಾಡುವುದರಲ್ಲಿ ಅಚ್ಚರಿ ಇಲ್ಲ’ ಎಂದಿದ್ದಾರೆ.
ನೂಪುರ್ ಶರ್ಮಾ ಅವರನ್ನುಬಿಜೆಪಿ ರಕ್ಷಿಸುತ್ತಿದೆ. ಪ್ರಚೋದನಕಾರಿ ಹೇಳಿಕೆ ನೀಡಿರುವನೂಪುರ್ ವಿರುದ್ಧ ಹಲವೆಡೆ ಎಫ್ಐಆರ್ ದಾಖಲಾಗಿದೆ. ಆದರೆ, ಅವರು ವಿರುದ್ಧ ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ಮೌನ ವಹಿಸಿದ್ದಾರೆ ಎಂದು ಓವೈಸಿ ಕಿಡಿಕಾರಿದ್ದಾರೆ.
‘ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ಕೂಡಲೇ ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
ಸೇನಾ ಅಲ್ಪಾವಧಿ ನೇಮಕಾತಿ ಯೋಜನೆ ‘ಅಗ್ನಿಪಥ’ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಯುವಕರ ಮೇಲೆ ನಡೆದ ಹಿಂಸಾಚಾರವನ್ನು ನಾವು ಖಂಡಿಸುತ್ತೇವೆ ಎಂದು ಓವೈಸಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.