ಹೈದರಾಬಾದ್: ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿಯ ‘ವಿಶೇಷ ತ್ವರಿತ ಪರಿಷ್ಕರಣೆ’ಗೆ (ಎಸ್ಐಆರ್) ಮುಂದಾಗಿರುವುದನ್ನು ವಿರೋಧಿಸಿ ಎಐಎಂಐಎಂ ಪಕ್ಷದ ವರಿಷ್ಠ ಅಸಾದುದ್ಧೀನ್ ಓವೈಸಿ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ನಡೆಸುತ್ತಿದೆ. ನಗರೀಕರಣ, ಹೆಚ್ಚುತ್ತಿರುವ ವಲಸೆ, ಮರಣ ಹೊಂದಿರುವ ವ್ಯಕ್ತಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡದೆ ಇರುವುದು, ಪಟ್ಟಿಯಲ್ಲಿ ವಿದೇಶಿ ಅಕ್ರಮ ವಲಸಿಗರ ಹೆಸರು ಸೇರ್ಪಡೆ ಸೇರಿದಂತೆ ‘ಎಸ್ಐಆರ್’ ಅನ್ನು ಸಮರ್ಥಿಸಿಕೊಳ್ಳಲು ಈಗ ಹಲವು ಕಾರಣಗಳನ್ನು ಹೇಳಲಾಗುತ್ತಿದೆ’ ಎಂದು ಅವರು ದೂರಿದ್ದಾರೆ.
‘ಎಸ್ಐಆರ್’ ಹಿಂದಿರುವ ಸಕಾರಣವನ್ನು ಚುನಾವಣಾ ಆಯೋಗ ಮತದಾರರಿಗೆ ತಿಳಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಗಳನ್ನು ದಾಖಲಿಸಲು ಎಐಎಂಐಎಂ ಸೇರಿದಂತೆ ವಿರೋಧ ಪಕ್ಷಗಳಿಗೆ, ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
ಬಿಹಾರದ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಹಿಂಬಾಗಿಲ ಮೂಲಕ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್ಆರ್ಸಿ) ತರುತ್ತಿದೆ ಎಂದು ಓವೈಸಿ ಈ ಹಿಂದೆ ದೂರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.