ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತು ಯಾವುದೇ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ತನ್ನ ನಾಯಕರಿಗೆ ಸೋಮವಾರ ತಾಕೀತು ಮಾಡಿದೆ.
ಈಚೆಗೆ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪದಾಧಿಕಾರಿಗಳು ವ್ಯಕ್ತಪಡಿಸಿರುವ ಅಭಿಪ್ರಾಯಗಳು ಮಾತ್ರ ಪಕ್ಷದ ನಿಲುವನ್ನು ಪ್ರತಿನಿಧಿಸುತ್ತದೆ ಎಂದು ಸ್ಪಷ್ಟಪಡಿಸಿದೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಆರ್.ಬಿ ತಿಮ್ಮಾಪುರ, ಹಿರಿಯ ಸಂಸದ ಶಶಿ ತರೂರ್, ಮಹಾರಾಷ್ಟ್ರ ಕಾಂಗ್ರೆಸ್ನ ಹಿರಿಯ ನಾಯಕ ವಿಜಯ್ ವಡೆಟ್ಟಿವಾರ್, ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ನ ಅಧ್ಯಕ್ಷ ತಾರಿಕ್ ಹಮೀದ್, ಕಾಶ್ಮೀರದ ಹಿರಿಯ ನಾಯಕ ಸೈಫುದ್ದೀನ್ ಸೋಜ್ ಹಾಗೂ ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಅವರು ಪಾಕಿಸ್ತಾನದ ಜತೆಗಿನ ಯುದ್ಧದ ಅಗತ್ಯತೆಯನ್ನು ಪ್ರಶ್ನಿಸಿ ನೀಡಿರುವ ಹೇಳಿಕೆಗಳು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಕೆಲವು ನಾಯಕರ ಹೇಳಿಕೆಗಳಿಂದಾಗಿ ಪಕ್ಷವು ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆಯೇ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ‘ಎಕ್ಸ್’ ಖಾತೆಯಲ್ಲಿ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ‘ಕೆಲವು ನಾಯಕರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು, ಕಾಂಗ್ರೆಸ್ನ ಅಭಿಪ್ರಾಯ ಅಲ್ಲ’ ಎಂದಿದ್ದಾರೆ.
ಪಕ್ಷದ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ) ಭಯೋತ್ಪಾದಕ ದಾಳಿಯನ್ನು ಖಂಡಿಸಿ ಏ.24ರಂದು ನಿರ್ಣಯ ತೆಗೆದುಕೊಂಡಿದೆ. ಖರ್ಗೆ ಮತ್ತು ರಾಹುಲ್ ಅವರು ಏ.25ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಪಕ್ಷದ ಅಭಿಪ್ರಾಯಗಳನ್ನು ತಿಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.