ಮಲ್ಲಿಕಾರ್ಜುನ ಖರ್ಗೆ
(ಪಿಟಿಐ ಚಿತ್ರ)
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕರ ದಾಳಿಯ ಸಂದರ್ಭದಲ್ಲಿ ಆಗಿರುವ ಭದ್ರತಾ ಲೋಪದ ಹೊಣೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
'ಆಪರೇಷನ್ ಸಿಂಧೂರ' ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರೀಯ ಹಿತಾಸಕ್ತಿಯ ವಿಷಯದಲ್ಲಿ ಪ್ರಧಾನಿ ನಡವಳಿಕೆಯನ್ನು ಪ್ರಶ್ನಿಸಿರುವ ಖರ್ಗೆ, 'ಪಹಲ್ಗಾಮ್ ದಾಳಿಯ ಸಂದರ್ಭದಲ್ಲಿ ಬಿಹಾರದಲ್ಲಿ ಪ್ರಚಾರ ಮಾಡುವ ಬದಲು ಪ್ರಧಾನಿ ಸರ್ವಪಕ್ಷ ಸಭೆಯಲ್ಲಿ ಹಾಜರಾಗಬೇಕಿತ್ತು' ಎಂದಿದ್ದಾರೆ.
'ಭಯೋತ್ಪಾದಕ ದಾಳಿಗಳನ್ನು ತಡೆಯವಲ್ಲಿ ಸರ್ಕಾರ ವಿಫಲವಾಗಿದೆ. ತನ್ನ ವೈಫಲ್ಯಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕು' ಎಂದು ಅವರು ಒತ್ತಾಯಿಸಿದ್ದಾರೆ.
'ಪಹಲ್ಗಾಮ್ನಲ್ಲಿ ಭದ್ರತಾ ಲೋಪ ಸಂಭವಿಸಿದೆ ಎಂದು ಸ್ವತಃ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಒಪ್ಪಿಕೊಂಡಿದ್ದಾರೆ. ಆದರೆ ನಿಜವಾಗಿಯೂ ಭದ್ರತಾ ಲೋಪಕ್ಕೆ ಕೇಂದ್ರ ಗೃಹ ಸಚಿವರು ಹೊಣೆ ಹೊರಬೇಕು. ಲೆಫ್ಟಿನೆಂಟ್ ಗವರ್ನರ್ ಅಲ್ಲ' ಎಂದು ಅವರು ಉಲ್ಲೇಖಿಸಿದ್ದಾರೆ.
'ನರೇಂದ್ರ ಮೋದಿ ಸರ್ಕಾರವು ದುರಂಹಕಾರಿಯಾಗಿದ್ದು, ವಿಪಕ್ಷಗಳ ಪತ್ರಗಳಿಗೆ ಉತ್ತರಿಸುತ್ತಿಲ್ಲ' ಎಂದೂ ಖರ್ಗೆ ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.