ಮೃತರ ಕುಟುಂಬಸ್ಥರನ್ನು ಭೇಟಿಯಾದ ಅಮಿತ್ ಶಾ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಬುಧವಾರ) ಅಂತಿಮ ನಮನ ಸಲ್ಲಿಸಿದ್ದಾರೆ.
ಬಳಿಕ ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ನುಡಿದಿದ್ದಾರೆ.
'ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಅತ್ಯಂತ ಭಾರವಾದ ಹೃದಯದಿಂದ ಅಂತಿಮ ನಮನ ಸಲ್ಲಿಸಲಾಯಿತು. ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ. ಈ ಭೀಕರ ಕೃತ್ಯದ ಹಿಂದಿನ ಉಗ್ರರನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರತಿಯೊಬ್ಬ ಭಾರತೀಯನೂ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಅನುಭವಿಸುತ್ತಿದ್ದಾರೆ. ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಅಮಾಯಕರ ಪ್ರಾಣ ಬಲಿ ತೆಗೆದುಕೊಂಡ ಈ ಭಯೋತ್ಪಾದಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮೃತರ ಕುಟುಂಬಸ್ಥರಿಗೆ ಮತ್ತು ಇಡೀ ದೇಶಕ್ಕೆ ಭರವಸೆ ನೀಡುತ್ತೇನೆ' ಎಂದು ಅವರು ಹೇಳಿದ್ದಾರೆ.
ಮಂಗಳವಾರ ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ನಡೆದ ಬೆನ್ನಲ್ಲೇ ಪ್ರಧಾನಿ ಅವರ ಸೂಚನೆ ಮೇರೆಗೆ ಜಮ್ಮುವಿಗೆ ತೆರಳಿದ್ದ ಗೃಹ ಸಚಿವ ಅಮಿತ್ ಶಾ, ಸರಣಿ ಸಭೆ ನಡೆಸಿದ್ದರಲ್ಲದೆ ಭದ್ರತೆಯನ್ನು ಪರಿಶೀಲಿಸಿದ್ದರು.
ಇಂದು ಬೆಳಿಗ್ಗೆ ಭಯೋತ್ಪಾದಕ ದಾಳಿ ನಡೆದ ಪಹಲ್ಗಾಮ್ಗೆ ಪ್ರಯಾಣಿಸಿದ ಗೃಹ ಸಚಿವರು ಪರಿಸ್ಥಿತಿಯನ್ನು ಅವಲೋಕಿಸಿದರು.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ್ದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.