ಆಪರೇಷನ್ ಸಿಂಧೂರ: ಉಗ್ರರ ನೆಲೆ ಮೇಲೆ ಭಾರತ ದಾಳಿ
(ಪಿಟಿಐ ಚಿತ್ರ)
ನವದೆಹಲಿ: 'ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ ಗುರಿಯಾಗಿಸಿ ಭಾರತ ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಕನಿಷ್ಠ 100 ಉಗ್ರರು ಹತ್ಯೆಗೀಡಾಗಿದ್ದಾರೆ' ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು (ಗುರುವಾರ) ಮಾಹಿತಿ ನೀಡಿದ್ದಾರೆ.
ಆಪರೇಷನ್ ಸಿಂಧೂರ ಸಂಬಂಧ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಈ ಕುರಿತು ರಕ್ಷಣಾ ಸಚಿವರು ವಿವರಣೆ ನೀಡಿದ್ದಾರೆ.
ಮಂಗಳವಾರ ಮಧ್ಯರಾತ್ರಿ ಸಶಸ್ತ್ರ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಒಂಬತ್ತು ನೆಲೆಗಳನ್ನು ಧ್ವಂಸಗೊಳಿಸಲಾಗಿತ್ತು.
ಸದ್ಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ಜಾರಿಯಲ್ಲಿದ್ದು, ಒಂದು ವೇಳೆ ಪಾಕಿಸ್ತಾನ ದಾಳಿ ನಡೆಸಿದರೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ರಾಜನಾಥ ತಿಳಿಸಿದ್ದಾರೆ.
'ಆಪರೇಷನ್ ಸಿಂಧೂರ ಜಾರಿಯಲ್ಲಿರುವುದರಿಂದ ಸಶಸ್ತ್ರ ಪಡೆಗಳ ಈ ಕಾರ್ಯಾಚರಣೆಗೆ ಸಂಬಂಧಿಸಿದ ತಾಂತ್ರಿಕ ವಿವರಗಳನ್ನು ಈಗ ಹಂಚಿಕೊಳ್ಳಲು ಸಾಧ್ಯವಿಲ್ಲ. ಈ ಕಾರಣಕ್ಕಾಗಿ ಸಶಸ್ತ್ರ ಪಡೆಯ ಯಾವುದೇ ಅಧಿಕಾರಿಯೂ ಸಭೆಯಲ್ಲಿ ಭಾಗವಹಿಸಿಲ್ಲ. ಅವರು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ' ಎಂದು ಅವರು ತಿಳಿಸಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಒಮ್ಮತ ಮೂಡಿಬಂದಿದೆ. ಗಡಿಯಲ್ಲಿ ಭಾರತೀಯರ ಭದ್ರತೆ ಹಾಗೂ ರಾಷ್ಟ್ರೀಯ ಭದ್ರತೆ ಬಗ್ಗೆ ವಿಪಕ್ಷದವರು ಕಳವಳ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ಸರ್ಕಾರ ಹಾಗೂ ಸಶಸ್ತ್ರ ಪಡೆಗಳ ಜತೆ ಇಡೀ ದೇಶವೇ ಒಗ್ಗಟ್ಟು ಪ್ರದರ್ಶಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.