
ಆರೋಪಿಗಳಿಂದ ವಶಪಡಿಸಿಕೊಂಡಿರುವ ಸ್ಫೋಟಕಗಳು
ಚಂಡಿಗಢ: ಪಂಜಾಜ್ನಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಜನನಿಬಿಡ ಪ್ರದೇಶಗಳಲ್ಲಿ ಗ್ರೆನೇಡ್ ದಾಳಿ ನಡೆಸಲು ಹೊಂಚು ಹಾಕಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಬೆಂಬಲಿತ ಭಯೋತ್ಪಾದಕರ ಸಂಚನ್ನು ಲುಧಿಯಾನ ಪೊಲೀಸರು ಭೇದಿಸಿದ್ದು, ವಿದೇಶಿ ಮೂಲದ 10 ಹ್ಯಾಂಡ್ಲರ್ಗಳನ್ನು ಬಂಧಿಸಿದ್ದಾರೆ.
‘ಬಂಧಿತ ಆರೋಪಿಗಳು ಮಲೇಷ್ಯಾ ಮತ್ತು ಪಾಕ್ ಮೂಲದ ಹ್ಯಾಂಡ್ಲರ್ಗಳೊಂದಿಗೆ ಸಂಪರ್ಕದಲ್ಲಿದ್ದರು. ಜತೆಗೆ, ದಾಳಿಗಳನ್ನು ನಡೆಸಲು ಹ್ಯಾಂಡ್ ಗ್ರೆನೇಡ್ಗಳನ್ನು ಸಂಗ್ರಹ ಮತ್ತು ವಿತರಣೆ ಮಾಡುವುದರಲ್ಲಿ ನಿರತರಾಗಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಪಂಜಾಬ್ನಲ್ಲಿ ಶಾಂತಿ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಮತ್ತು ಗಡಿಯಾಚೆಗಿನ ಭಯೋತ್ಪಾದನಾ ಜಾಲಗಳನ್ನು ಪತ್ತೆಹಚ್ಚಿ ನಾಶಪಡಿಸಲು ನಾವು ಬದ್ಧರಾಗಿದ್ದೇವೆ’ ಎಂದು ಡಿಜಿಪಿ ಗೌರವ್ ಯಾದವ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ನವೆಂಬರ್ 10ರಂದು (ಸೋಮವಾರ) ದೆಹಲಿಯ ಕೆಂಪುಕೋಟೆ ಮೆಟ್ರೊ ನಿಲ್ದಾಣದ ಸಮೀಪದ ಟ್ರಾಫಿಕ್ ಸಿಗ್ನಲ್ನಲ್ಲಿ ಕಾರು ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 13 ಮಂದಿ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಈ ಘಟನೆಯನ್ನು ‘ಭಯೋತ್ಪಾದಕ ಕೃತ್ಯ’ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುವುದು ಎಂದೂ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.