ADVERTISEMENT

ಕೋವಿಡ್‌ನಿಂದ ನ್ಯಾಯಾಂಗದಲ್ಲಿ ಆಧುನಿಕ ವಿಧಾನ ಅಳವಡಿಕೆ : ಸಿಜೆಐ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2023, 15:45 IST
Last Updated 10 ಮಾರ್ಚ್ 2023, 15:45 IST
ಡಿ.ವೈ.ಚಂದ್ರಚೂಡ್
ಡಿ.ವೈ.ಚಂದ್ರಚೂಡ್   

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗವು ನ್ಯಾಯ ಒದಗಿಸಲು ನ್ಯಾಯಾಂಗ ವ್ಯವಸ್ಥೆಯಲ್ಲಿ ಆಧುನಿಕ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಮಾಡಿತು. ಸಕ್ರಿಯ ನಿರ್ಧಾರ ತೆಗೆದುಕೊಳ್ಳಲು ಮತ್ತೊಂದು ಸಾಂಕ್ರಾಮಿಕ ರೋಗಕ್ಕೆ ಕಾಯಬಾರದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಶುಕ್ರವಾರ ಹೇಳಿದರು.

ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸದಸ್ಯ ರಾಷ್ಟ್ರಗಳ ಸುಪ್ರೀಂ ಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ 18 ನೇ ಸಭೆಯಲ್ಲಿ ಅವರು ಮಾತನಾಡಿದರು.

ಸಾಂಕ್ರಾಮಿಕ ರೋಗದ ನಂತರ, ದೇಶದ ಜಿಲ್ಲಾ ನ್ಯಾಯಾಲಯಗಳು 1.65 ಕೋಟಿ ಪ್ರಕರಣಗಳು, ಹೈಕೋರ್ಟ್‌ಗಳು 70.58 ಲಕ್ಷ ಪ್ರಕರಣ ಮತ್ತು ಸುಪ್ರೀಂ ಕೋರ್ಟ್ 3,79,954 ಪ್ರಕರಣಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಆಲಿಸಿದೆ ಎಂದರು.

ADVERTISEMENT

ಕೋವಿಡ್‌ ಸಂದರ್ಭದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಕ್ಷೇತ್ರಗಳನ್ನು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡಿವೆ ಎಂದರು.

ಕೋವಿಡ್ -19 ನ್ಯಾಯಾಂಗ ವ್ಯವಸ್ಥೆಗೆ ವಿವಿಧ ಸವಾಲು ಎಸೆದಿದೆ. ಸಾಂಕ್ರಾಮಿಕ ಬಿಕ್ಕಟ್ಟಿನ ನಡುವೆ ಲಾಕ್‌ಡೌನ್‌ಗಳು ಇಡೀ ನ್ಯಾಯ ವಿತರಣಾ ವ್ಯವಸ್ಥೆಗೆ ತೊಂದರೆ ನೀಡಿತು. ನ್ಯಾಯಾಂಗ ವ್ಯವಸ್ಥೆಯಲ್ಲಿ ಮೊದಲ ಬಾರಿಗೆ ವರ್ಚುವಲ್ ವಿಚಾರಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಎಸ್‌ಸಿಒ ಸದಸ್ಯ ರಾಷ್ಟ್ರಗಳ ಸುಪ್ರೀಂ ಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ 18 ನೇ ಸಭೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 10 ರಿಂದ 12 ರವರೆಗೆ ಆಯೋಜಿಸಿದೆ. ಚೀನಾ, ಭಾರತ, ಕಜಕಿಸ್ತಾನ್, ಕಿರ್ಗಿಸ್ತಾನ್, ಪಾಕಿಸ್ತಾನ, ರಷ್ಯಾ, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಎಸ್‌ಸಿಒ ಸದಸ್ಯ ರಾಷ್ಟ್ರಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.