ADVERTISEMENT

ಕಾರವಾರ: ಟ್ಯಾಗೋರ್‌ ಕಡಲತೀರ ಮಾಲಿನ್ಯಗೊಳಿಸುವವರಿಗೆ ದಂಡಕ್ಕೆ ಶಿಫಾರಸು

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನೇಮಿಸಿದ ಸಮಿತಿಯಿಂದ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2022, 14:16 IST
Last Updated 13 ಮಾರ್ಚ್ 2022, 14:16 IST
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ    

ನವದೆಹಲಿ: ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರವನ್ನು ಮಾಲಿನ್ಯ ಮಾಡುವವರಿಗೆ ದಂಡ ವಿಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ನೇಮಕ ಮಾಡಿರುವ ಸಮಿತಿ ಶಿಫಾರಸು ಮಾಡಿದೆ.

ಅಲ್ಲದೆ, ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ನಿಯಮಗಳನ್ನು ಉಲ್ಲಂಘಿಸಿ ಕಡಲತೀರದಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳುವವರಿಗೆ ದಂಡ ವಿಧಿಸಬೇಕು ಎಂದೂ ಸಮಿತಿ ಹೇಳಿದೆ.

ಸಮಿತಿಯ ಸದಸ್ಯರನ್ನು ಒಳಗೊಂಡ ನಿಯೋಗವು ಟ್ಯಾಗೋರ್‌ ಕಡಲತೀರ ಹಾಗೂ ಕಾಳಿ ನದಿ ತೀರಕ್ಕೆ ಭೇಟಿ ನೀಡಿದ ನಂತರ ಎನ್‌ಜಿಟಿಗೆ ಸಲ್ಲಿಸಿರುವ ವರದಿಯಲ್ಲಿ ಈ ಶಿಫಾರಸುಗಳನ್ನು ಮಾಡಿದೆ.

ADVERTISEMENT

‘ನಿಯೋಗವು ಸ್ಥಳ ಭೇಟಿ ನೀಡಿದ ಸಂದರ್ಭದಲ್ಲಿ, ಹೋಟೆಲ್‌ವೊಂದರ ತ್ಯಾಜ್ಯ ಕಡಲತೀರವನ್ನು ಸೇರುತ್ತಿರುವುದು ಕಂಡುಬಂತು. ಈ ವಿಷಯವಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರ ಪಾಲಿಕೆಗೆ ನಿರ್ದೇಶನ ನೀಡಬೇಕು. ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದಿಂದ ಪರವಾನಗಿ ಪಡೆಯದ ಹೊರತು, ಕಡಲತೀರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಬೇಕು’ ಎಂದು ವರದಿಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.