ADVERTISEMENT

ಸಚಿವ ದೇಶ್‌ಮುಖ್ ವಿರುದ್ಧ ಸಿಬಿಐ ತನಿಖೆಗೆ ಆಗ್ರಹಿಸಿ ಪರಮ್ ಬೀರ್ ಸುಪ್ರೀಂ ಮೊರೆ

ಏಜೆನ್ಸೀಸ್
Published 22 ಮಾರ್ಚ್ 2021, 11:08 IST
Last Updated 22 ಮಾರ್ಚ್ 2021, 11:08 IST
ಪರಮ್ ಬೀರ್ ಸಿಂಗ್
ಪರಮ್ ಬೀರ್ ಸಿಂಗ್   

ಮುಂಬೈ: ಭ್ರಷ್ಟಾಚಾರ ಆರೋಪದಬಗ್ಗೆಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಸೋಮವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಅಲ್ಲದೆ ತಮ್ಮನ್ನು ಮಹಾರಾಷ್ಟ್ರದ ಗೃಹರಕ್ಷಕ ದಳದ (ಹೋಂ ಗಾರ್ಡ್) ಮಹಾನಿರ್ದೇಶಕರಾಗಿ (ಡಿಜಿ) ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ದೇಶದ ಸರ್ವೋಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರದಿಂದ ತಮ್ಮ ವಿರುದ್ಧ ಮತ್ತಷ್ಟು ಬಲವಂತದ ಕ್ರಮಗಳಿಂದ ರಕ್ಷಣೆಯನ್ನು ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ಇತ್ತೀಚೆಗಷ್ಟೇ ಅನಿಲ್ ದೇಶ್‌ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಪರಮ್ ಬೀರ್ ಸಿಂಗ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದರು. ಇದು ಮಹಾರಾಷ್ಟ್ರ ಅಷ್ಟೇ ಅಲ್ಲದೆ ದೇಶದ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಏತನ್ಮಧ್ಯೆ ಮಹಾರಾಷ್ಟ್ರದ ಗೃಹರಕ್ಷಕ ದಳದ (ಹೋಂ ಗಾರ್ಡ್) ಮಹಾನಿರ್ದೇಶಕರಾಗಿ (ಡಿಜಿ) ಮಾಜಿ ಪೊಲೀಸ್ ಆಯಕ್ತ ಪರಮ್ ಬೀರ್ ಸಿಂಗ್ ಸೋಮವಾರದಂದು ಅಧಿಕಾರ ವಹಿಸಿಕೊಂಡಿರುವುದಾಗಿ ವರದಿಯಾಗಿದೆ.

ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣವನ್ನು ಸಮರ್ಪಕವಾಗಿ ನಿರ್ವಹಿಸಲು ವಿಫಲವಾಗಿದ್ದಾರೆ ಎಂಬ ಕಾರಣಕ್ಕೆ ಸಿಂಗ್ ಅವರನ್ನು ಪೊಲೀಸ್ ಆಯುಕ್ತರ ಸ್ಥಾನದಿಂದ ಮಾರ್ಚ್ 17ರಂದು ಎತ್ತಂಗಡಿ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಹೇಮಂತ್ ನಗ್ರಾಲೆ ಅವರನ್ನು ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.