ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ರಾಷ್ಟ್ರ ರಾಜಧಾನಿ ತಿದ್ದುಪಡಿ ಮಸೂದೆಯನ್ನು(ಎನ್ಸಿಟಿ) ರಾಜ್ಯಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ.
ದೆಹಲಿಯ ಚುನಾಯಿತ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್ಗೆ ಈ ಮಸೂದೆ ಹೆಚ್ಚಿನ ಅಧಿಕಾರವನ್ನು ನೀಡಲಿದೆ.
ವಿವಾದಿತ ಮಸೂದೆಯು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಕೋಲಾಹಲ ಸೃಷ್ಟಿಸಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್, ಬಿಜೆಡಿ, ಎಸ್ಪಿ ಮತ್ತು ವೈಎಸ್ಆರ್ ಪಕ್ಷಗಳ ಸಂಸದರು ಸದನದಿಂದ ಹೊರನಡೆದಿದ್ದಾರೆ.
ಮಸೂದೆ ತಿದ್ದುಪಡಿಗೆ ಆಕ್ರೋಶ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಇದನ್ನು 'ಪ್ರಜಾಪ್ರಭುತ್ವದ ಕರಾಳ ದಿನ'ವೆಂದು ಕಿಡಿ ಕಾರಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಜಿಎನ್ಸಿಟಿಡಿ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆ ಅಂಗೀಕರಿಸಿದೆ. ಇದು ಭಾರತದ ಪ್ರಜಾಪ್ರಭುತ್ವಕ್ಕೆ ಕರಾಳ ದಿನ. ಜನರಿಗೆ ಮರಳಿ ಅಧಿಕಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ನಾವು ಹೋರಾಡುತ್ತೇವೆ. ಏನೇ ಅಡೆತಡೆಗಳು ಇದ್ದರೂ ನಾವು ಉತ್ತಮ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ನಮ್ಮ ಕೆಲಸ ನಿಲ್ಲುವುದಿಲ್ಲ ಅಥವಾ ನಿಧಾನವಾಗುವುದಿಲ್ಲ' ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.