ಸಂಸತ್ ಭವನದ ಹೊರಗೆ 'ಇಂಡಿಯಾ' ಮೈತ್ರಿಕೂಟದ ಸಂಸದರ ಪ್ರತಿಭಟನೆ
ಕೃಪೆ: X / @cpimspeak
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕಾರ್ಮಿಕ ಸಂಹಿತೆಗಳ ವಿರುದ್ಧ 'ಇಂಡಿಯಾ' ಮೈತ್ರಿಕೂಟದ ಸಂಸದರು ಸಂಸತ್ ಭವನದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ತೃಣಮೂಲ ಕಾಂಗ್ರೆಸ್ ಸಂಸದರೂ ಭಾಗಿಯಾದರು.
ಪ್ರತಿಭಟನೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಮೋದಿ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳಿಂದ ಕಾರ್ಮಿಕರಿಗೆ ಅನ್ಯಾಯಾವಾಗುತ್ತಿದೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದೆ.
ಸಂಸತ್ತಿನ ಚಳಿಗಾಲಯದ ಅಧಿವೇಶನ ಸೋಮವಾರ ಆರಂಭವಾಗಿದೆ. ಮೊದಲ ದಿನವೇ ಹಲವು ನಾಟಕೀಯ ಸನ್ನಿವೇಶಗಳು ನಡೆದವು. ಪ್ರಧಾನಿ ನರೇಂದ್ರ ಮೋದಿ ಅವರು, 'ಸಂಸತ್ತು ನಾಟಕದ ವೇದಿಕೆ ಅಲ್ಲ' ಎಂದು ಕಲಾಪ ಆರಂಭಕ್ಕೂ ಮೊದಲು ಕಿಡಿಕಾರಿದ್ದರು. ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್, 'ಮೋದಿ ಅವರೇ ದೊಡ್ಡ ನಾಟಕಕಾರ' ಎಂದು ಕುಟುಕಿತ್ತು.
ಬಳಿಕ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತ ಚರ್ಚೆ ವಿಚಾರವಾಗಿ ಆಡಳಿತ–ವಿಪಕ್ಷಗಳ ನಡುವೆ ತೀವ್ರ ಜಟಾಪಟಿ ನಡೆದು ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿತ್ತು.
ಎಸ್ಐಆರ್ ಕುರಿತು ಲೋಕಸಭೆಯಲ್ಲಿ ಇದೇ 9ರಂದು ಚರ್ಚೆಗೆ ಅವಕಾಶ ಕಲ್ಪಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.