ADVERTISEMENT

‘ಪಕ್ಷ ಎಲ್ಲ ವರ್ಗದವರನ್ನೂ ತಲುಪಬೇಕು’

ಲಾಲ್‌ಬಹದ್ದೂರ್‌ ಶಾಸ್ತ್ರಿ ಪ್ರತಿಮೆ ಅನಾವರಣ l ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 20:00 IST
Last Updated 6 ಜುಲೈ 2019, 20:00 IST
ಮಾಜಿ ಪ್ರಧಾನಿ ಲಾಲ್‌ಬಹದ್ದೂರ್‌ ಶಾಸ್ತ್ರಿ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅನಾವರಣಗೊಳಿಸಿದರು. ಯೋಗಿ ಆದಿತ್ಯನಾಥ ಮತ್ತು ಜೆ.ಪಿ. ನಡ್ಡಾ ಇದ್ದಾರೆ
ಮಾಜಿ ಪ್ರಧಾನಿ ಲಾಲ್‌ಬಹದ್ದೂರ್‌ ಶಾಸ್ತ್ರಿ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅನಾವರಣಗೊಳಿಸಿದರು. ಯೋಗಿ ಆದಿತ್ಯನಾಥ ಮತ್ತು ಜೆ.ಪಿ. ನಡ್ಡಾ ಇದ್ದಾರೆ   

ವಾರಾಣಸಿ: ಜನರಿಗೆ ಇನ್ನಷ್ಟು ಹತ್ತಿರವಾಗುವ ಉದ್ದೇಶದಿಂದ ಬಿಜೆಪಿಯು ಹಮ್ಮಿಕೊಂಡಿರುವ ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯಿಂದ ಶನಿವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಕಾಶಿಯ ನೆಲದಿಂದ ಎಲ್ಲಾ ಕಾರ್ಯಕರ್ತರನ್ನು ಅಭಿನಂದಿಸಲು ಅವಕಾಶ ಸಿಕ್ಕಿದೆ. ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗಾಗಿ ಶ್ರಮಿಸಿದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರನ್ನೂ ಈ ಸಂದರ್ಭದಲ್ಲಿ ಅಭಿನಂದಿಸಲು ಇಚ್ಛಿಸುತ್ತೇನೆ ಎಂದರು.

‘ಸಮಾಜದ ಪ್ರತಿಯೊಂದು ವರ್ಗವನ್ನೂ ಬಿಜೆಪಿ ತಲುಪಬೇಕು. ಎಲ್ಲಾ ವರ್ಗದ ಜನರೂ ಪಕ್ಷದೊಳಗೆ ಇರಬೇಕು ಎಂಬ ದೃಷ್ಟಿಯಿಂದ ಕೆಲಸ ಮಾಡಬೇಕು. ಈಶಾನ್ಯ ರಾಜ್ಯಗಳಲ್ಲಿ ನಾವಿಂದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದೇವೆ. ದಕ್ಷಿಣ ಭಾಗದಲ್ಲೂ ಪಕ್ಷ ಗಟ್ಟಿಯಾಗಿದೆ. ನಾವು ಇನ್ನೂ ತಲುಪಲಾಗದ ಮತ್ತು ಶಕ್ತಿ ಹೀನರಾಗಿರುವ ಭಾಗಗಳ ಕಡೆಗೆ ಈಗ ಗಮನ ಹರಿಸಬೇಕು’ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

ADVERTISEMENT

ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುವುದಕ್ಕೂ ಮುನ್ನ ಮೋದಿ ಅವರು ಇಲ್ಲಿನ ವಿಮಾನ ನಿಲ್ದಾಣದ ಆವರಣದಲ್ಲಿ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್‌ ಶಾಸ್ತ್ರಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರನಾಥ ಪಾಂಡೆ, ಲಾಲ್‌ಬಹದ್ದೂರ್‌ ಶಾಸ್ತ್ರಿ ಅವರ ಪುತ್ರ
ರಾದ ಅನಿಲ್‌ ಶಾಸ್ತ್ರಿ ಹಾಗೂ ಸುನಿಲ್‌ ಶಾಸ್ತ್ರಿ ಇದ್ದರು.

ವಾರಾಣಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 27 ಲಕ್ಷ ಗಿಡಗಳನ್ನು ನೆಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ‘ಆನಂದ ಕಾನನ’ ಉದ್ಯಾನದಲ್ಲಿ ಒಂದು ಗಿಡ ನೆಡುವ ಮೂಲಕ ಮೋದಿ ಈ ಅಭಿಯಾನಕ್ಕೂ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.