ನವದೆಹಲಿ: ಪದೇ ಪದೇ ಎಚ್ಚರಿಕೆ ನೀಡಿದ ಹೊರತಾಗಿಯೂ ಸರಿಯಾಗಿ ಮಾಸ್ಕ್ ಧರಿಸದ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಅಂಥವರನ್ನು ಅಶಿಸ್ತಿನ ಪ್ರಯಾಣಿಕರು ಎಂದು ಪರಿಗಣಿಸಿ ವಿಮಾನ ಹೊರಡುವುದಕ್ಕೂ ಮುನ್ನ ಕೆಳಗಿಳಿಸಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ದೆಹಲಿ ಹೈಕೋರ್ಟ್ಗೆ ತಿಳಿಸಿದೆ.
ಡಿಜಿಸಿಎ ಕೈಗೊಂಡಿರುವ ಕ್ರಮಗಳ ಕುರಿತು ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ. ಜತೆಗೆ, ಕೋವಿಡ್ ಸೋಂಕಿನಿಂದ ಪ್ರಯಾಣಿಕರಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳನ್ನು ಡಿಜಿಸಿಎ ಇದೇ ರೀತಿ ಮುಂದುವರಿಸುವ ನಿರೀಕ್ಷೆ ಇದೆ ಎಂದು ಹೇಳಿದೆ.
ಈ ಹಿಂದೆ ನೀಡಿದ್ದ ನಿರ್ದೇಶನಗಳ ಅನುಷ್ಠಾನಕ್ಕೆ ಸಂಬಂಧಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ನ್ಯಾಯಾಲಯವು ಆರಂಭದಲ್ಲಿ ಮುಂದಾಗಿತ್ತು. ಆದರೆ, ಡಿಜಿಸಿಎ ಕೈಗೊಂಡ ಕ್ರಮಗಳನ್ನು ಗಮನಿಸಿ ಪ್ರಕರಣವನ್ನು ಕೊನೆಗೊಳಿಸಲು ನಿರ್ಧರಿಸಿತು ಎಂದು ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಹಾಗೂ ಸಿ. ಹರಿಶಂಕರ್ ಅವರಿದ್ದ ನ್ಯಾಯಪೀಠ ಹೇಳಿದೆ.
ವಿಮಾನ ನಿಲ್ದಾಣದಿಂದ ವಿಮಾನಕ್ಕೆ ಕರೆದೊಯ್ಯುವಾಗ ಪ್ರಯಾಣಿಕರು ಮಾಸ್ಕ್ಗಳನ್ನು ಸರಿಯಾಗಿ ಧರಿಸದಿರುವುದನ್ನು ಮತ್ತು ಮಾಸ್ಕ್ ಧರಿಸಲು ಹಿಂದೇಟು ಹಾಕುವುದನ್ನು ಗಮನಿಸಿ ನ್ಯಾಯಮೂರ್ತಿ ಹರಿಶಂಕರ್ ಅವರು ಮಾರ್ಚ್ 8ರಂದು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು.
ತಕ್ಷಣವೇ ಡಿಜಿಸಿಎ ಮತ್ತು ಇತರ ವಿಮಾನಯಾನ ಸಂಸ್ಥೆಗಳಿಗೆ ಹೈಕೋರ್ಟ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.