ADVERTISEMENT

ಕೇಂದ್ರವನ್ನು ಕೋರ್ಟ್‌ ಕಟಕಟೆಯಲ್ಲಿ ನಿಲ್ಲಿಸಿ: ಸಂಜಯ್ ರಾವುತ್‌

ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ಸಲಹೆ

ಪಿಟಿಐ
Published 21 ಜುಲೈ 2021, 9:32 IST
Last Updated 21 ಜುಲೈ 2021, 9:32 IST
ಸಂಜಯ್ ರಾವುತ್‌
ಸಂಜಯ್ ರಾವುತ್‌   

ಮುಂಬೈ: ಕೋವಿಡ್‌–19 ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿರುವ ಕೋವಿಡ್‌ ರೋಗಿಗಳ ಬಂಧುಗಳು, ಕೇಂದ್ರ ಸರ್ಕಾರವನ್ನು ನ್ಯಾಯಾಲಯದ ಕಟಕಟೆಗೆ ತಂದು ನಿಲ್ಲಿಸುವಂತೆ ಶಿವಸೇನಾ ಸಂಸದ ಸಂಜಯ್‌ ರಾವುತ್ ಹೇಳಿದ್ದಾರೆ.

‘ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ವರದಿಯಾದಂತೆ ಕೋವಿಡ್‌ ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದ ಕೋವಿಡ್‌ ಸಾವುಗಳು ಸಂಭವಿಸಿಲ್ಲ‘ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ನೀಡಿದ ಮಾಹಿತಿಗೆ ಪ್ರತಿಕ್ರಿಯಿಸಿರುವ ರಾವುತ್‌, ‘ಹಲವು ರಾಜ್ಯಗಳಲ್ಲಿ ಅನೇಕರು ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದ್ದಾರೆ‘ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವುತ್‌, ‘ಆಮ್ಲಜನಕದ ಕೊರತೆಯಿಂದ ಸಾವುಗಳು ಸಂಭವಿಸಿದ್ದರೂ, ಕೇಂದ್ರ ಸರ್ಕಾರ ಸತ್ಯವನ್ನು ಮರೆಮಾಚುತ್ತಿದೆ. ಇದು ಪೆಗಾಸಸ್ ನ (ಇಸ್ರೇಲಿ ಸ್ಪೈವೇರ್) ಪರಿಣಾಮ ಎಂದು ನಾನು ಭಾವಿಸುತ್ತೇನೆ‘ ಎಂದು ವ್ಯಂಗ್ಯವಾಡಿದರು.

ADVERTISEMENT

‘ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ನೀಡಿರುವ ಈ ಮಾಹಿತಿಯನ್ನು ಆಮ್ಲಜನಕದ ಕೊರತೆಯಿಂದಲೇ ಸಾವನ್ನಪ್ಪಿದವರ ಸಂಬಂಧಿಕರು ಹೇಗೆ ಸ್ವೀಕರಿಸುತ್ತಾರೆ ಎಂದು ಪತ್ತೆ ಮಾಡಬೇಕಿದೆ‘ ಎಂದು ಹೇಳಿದ್ದಾರೆ.

‘ಕೋವಿಡ್‌ ಮೊದಲ ಅಲೆಯಲ್ಲಿ 3095 ಮೆಟ್ರಿಕ್‌ ಟನ್ನಿನಷ್ಟು ವೈದ್ಯಕೀಯ ಆಮ್ಲಜನಕದ ಬೇಡಿಕೆ ಇತ್ತು. ಕೋವಿಡ್‌ ಎರಡನೇ ಅಲೆಯ ವೇಳೆಗೆ ಆ ಬೇಡಿಕೆ ದ್ವಿಗುಣವಾಯಿತು. ಎರಡನೇ ಅಲೆಯಲ್ಲಿ 9 ಸಾವಿರ ಮೆಟ್ರಿಕ್‌ ಟನ್‌ನಷ್ಟು ವೈದ್ಯಕೀಯ ಆಮ್ಲಜನಕದ ಬೇಡಿಕೆ ಇತ್ತು. ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸಮನಾಗಿ ಆಮ್ಲಜನಕವನ್ನು ಪೂರೈಕೆ ಮಾಡಲು ಕ್ರಮ ಕೈಗೊಂಡಿದೆ‘ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.