ADVERTISEMENT

ಪಿಂಚಣಿ: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಆರಂಭ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 20:45 IST
Last Updated 2 ಆಗಸ್ಟ್ 2022, 20:45 IST
   

ನವದೆಹಲಿ: 1995ರ ನೌಕರರ ಭವಿಷ್ಯ ನಿಧಿ (ಇಪಿಎಸ್‌ 95) ಕಾಯ್ದೆಯ ತಿದ್ದುಪಡಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ 67 ಅರ್ಜಿಗಳು ಹಾಗೂ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ಆರಂಭವಾಯಿತು.

ನ್ಯಾಯಮೂರ್ತಿಗಳಾದ ಯು.ಯು ಲಲಿತ್‌, ಅನಿರುದ್ಧ ಬೋಸ್ ಹಾಗೂ ಸುಧಾಂಶು ದುಲಿಯಾ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವು ಇಪಿ ಎಫ್‌ಒ ವಕೀಲರ ವಾದವನ್ನು ಆಲಿಸಿತು. ಪೀಠವು ಮೂರು ದಿನಗಳ ಕಾಲ
ವಾದ ಹಾಗೂ ಪ್ರತಿವಾದಗಳನ್ನು ಆಲಿಸಲಿದೆ.

ಈ ಯೋಜನೆಯಡಿ ಕಡಿಮೆ ಪಿಂಚಣಿ ನಿಗದಿ ಮಾಡಲಾಗಿದೆ ಎಂದು ಆರೋಪಿಸಿ ನಿವೃತ್ತ ನೌಕರ ಆರ್‌.ಸಿ. ಗುಪ್ತ ಎಂಬವರು 2014ರಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾ ಲಯವು ಗುಪ್ತ ಅವರಿಗೆ ಮಾಸಿಕ ₹28 ಸಾವಿರ ಪಿಂಚಣಿ ನೀಡಬೇಕು ಎಂದು 2016ರಲ್ಲಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ, ಕಡಿಮೆ ಪಿಂಚಣಿಯನ್ನು ಪ್ರಶ್ನಿಸಿ ಹಲವು ಮಂದಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಕರ್ನಾಟಕ ಹೈಕೋರ್ಟ್‌ ಸಹ ಪಿಂಚಣಿದಾರರ ಪರವಾಗಿ ತೀರ್ಪು ನೀಡಿತ್ತು.

ADVERTISEMENT

ಹಲವು ಪ್ರಕರಣ
ಗಳಲ್ಲಿ ಪಿಂಚಣಿದಾರರ ಪರ ಆದೇಶ ನೀಡಿರುವುದನ್ನು ಪ್ರಶ್ನಿಸಿ ನೌಕರರ ಭವಿಷ್ಯ ನಿಧಿ ಸಂಸ್ಥೆಯು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತು. ಪಿಂಚಣಿದಾರರು ಸಹ ಸುಪ್ರೀಂ ಕೋರ್ಟ್‌ ಮೊರೆ ಹೋದರು.

ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಪ್ರಕರ ಣದ ವಿಚಾರಣೆ ನಡೆಸಿ, ‘ಇದು ಸೂಕ್ಷ್ಮ ಪ್ರಕರಣವಾಗಿದ್ದು, ವ್ಯಾಪಕ ಚರ್ಚೆ ನಡೆಯಬೇಕಿದೆ. ಹೀಗಾಗಿ, ವಿಸ್ತೃತ ಪೀಠಕ್ಕೆ ವರ್ಗಾಯಿಸಬೇಕು’ ಎಂದು ಸಲಹೆ ನೀಡಿತು. ಬಳಿಕ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಯಿತು.

‘ದೇಶದಲ್ಲಿ 78 ಲಕ್ಷಕ್ಕೂ ಅಧಿಕ ಮಂದಿ ಕಡಿಮೆ ಪಿಂಚಣಿ ಪಡೆಯು
ತ್ತಿದ್ದಾರೆ. 95ರ ಪಿಂಚಣಿ ಯೋಜನೆಯಿಂದ ದೊಡ್ಡ ಮಟ್ಟದಲ್ಲಿ ಅನ್ಯಾಯವಾಗಿದೆ. ಇದನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ್ದೇವೆ’ ಎಂದು ಇಪಿಎಸ್‌–95 ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ‌ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶಂಕರ್‌ ಕುಮಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.