ಮುಂಬೈ: ಬಾಲಿವುಡ್ ನಟ ಶಾರುಕ್ ಖಾನ್ ಅವರ ಮಗ ಆರ್ಯನ್ ಖಾನ್ ಅವರ ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಮಾದಕವಸ್ತು ನಿಯಂತ್ರಣ ಬ್ಯೂರೊ (ಎನ್ಸಿಬಿ) ವಿರುದ್ಧ ಯಾವುದೇ ರೀತಿಯ ಟೀಕೆ, ಟಿಪ್ಪಣಿಗಳನ್ನು ಮಾಡದಂತೆ ಮಹಾರಾಷ್ಟ್ರದ ಸಚಿವ, ಎನ್ಸಿಪಿ ನಾಯಕ ನವಾಬ್ ಮಲಿಕ್ ಅವರಿಗೆ ನಿರ್ದೇಶನ ನೀಡುವಂತೆ ಕೋರಿ ಮುಂಬೈ ನಿವಾಸಿಯೊಬ್ಬರು ಬಾಂಬೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ.
ಮಾದಕ ವ್ಯಸನಿಗಳ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವ ಕೌಸರ್ ಅಲಿ ಎಂಬುವವರು ಮಂಗಳವಾರ ಈ ಪಿಐಎಲ್ ಸಲ್ಲಿಸಿದ್ದಾರೆ.
ಹೀಗೆ ತನಿಖಾ ಸಂಸ್ಥೆಗಳನ್ನು ಗುರಿಯಾಗಿಸಿ ಟೀಕೆ ಮಾಡುವುದು ಸರಿಯಲ್ಲ. ಅದು ಆ ಸಂಸ್ಥೆಗಳ ನೈತಿಕತೆಯನ್ನು ಕುಗ್ಗಿಸುತ್ತದೆ. ಅಲ್ಲದೆ ಜನರಲ್ಲಿ ಮಾದಕ ದ್ರವ್ಯ ಸೇವನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಹೇಳಿದ್ದಾರೆ.
ಮಲಿಕ್ ಅವರ ಇತ್ತೀಚಿನ ಕೆಲ ಟ್ವೀಟ್ಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಿರುವ ಅವರು, ಸಚಿವರು ಎನ್ಸಿಬಿ ಮತ್ತು ಅದರ ಅಧಿಕಾರಿ ಸಮೀರ್ ವಾಂಖೆಡೆ ಅವರನ್ನು ‘ನಿರುತ್ಸಾಹಗೊಳಿಸುವಂತೆ’ ಟ್ವೀಟ್ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ವಾಂಖೆಡೆ ಅವರ ಮೇಲ್ವಿಚಾರಣೆಯಲ್ಲಿ ಎನ್ಸಿಬಿ ಇತ್ತೀಚಿನ ದಿನಗಳಲ್ಲಿ ‘ಅತ್ಯಂತ ಪರಿಣಾಮಕಾರಿ’ ಏಜೆನ್ಸಿ ಎಂದು ಸಾಬೀತಾಗಿದೆ ಎಂದು ಅವರು ಮನವಿಯಲ್ಲಿ ಹೇಳಿದ್ದಾರೆ. ಹೈಕೋರ್ಟ್ ಈ ಪಿಐಎಲ್ ವಿಚಾರಣೆಗೆ ಇನ್ನೂ ದಿನಾಂಕ ನಿಗದಿಪಡಿಸಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.