ನವದೆಹಲಿ: ಕೋವಿಡ್–19ನಿಂದ ಸಾವಿಗೀಡಾದ ನ್ಯಾಯಾಂಗ ಸದಸ್ಯರ ಕುಟುಂಬಕ್ಕೆ ₹1 ಕೋಟಿ ಪರಿಹಾರವನ್ನು ನೀಡುಬೇಕು. ಜತೆಗೆ ಅವರನ್ನು ಮುಂಚೂಣಿ ಕಾರ್ಯಕರ್ತರು ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಪ್ರತಿಕ್ರಿಯಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರ ಪೀಠವು ಈ ಸಂಬಂಧ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಕರ್ತವ್ಯದಲ್ಲಿ ನಿರತರಾಗಿದ್ದ ವೇಳೆ ಕೋವಿಡ್ನಿಂದ ಮೃತಪಟ್ಟ ಹೈಕೋರ್ಟ್ ಸೇರಿದಂತೆ ಇತರೆ ನ್ಯಾಯಾಲಯಗಳ ಸಿಬ್ಬಂದಿಯ ಕುಟುಂಬದವರಿಗೂ ₹50 ಲಕ್ಷ ಪರಿಹಾರ ಧನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಈ ಸಂಬಂಧ ವಕೀಲ ತನ್ವೀರ್ ಅಹಮದ್ ಮಿರ್ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
‘ಕೋವಿಡ್–19ನಿಂದ ಮೃತಪಟ್ಟ ಸರ್ಕಾರಿ ಅಧಿಕಾರಿಗಳ ಕುಟುಂಬದವರಿಗೆ ದೆಹಲಿ ಸರ್ಕಾರವು ಪರಿಹಾರವನ್ನು ನೀಡುತ್ತದೆ. ಆದರೆ ಈ ರೀತಿಯ ಕ್ರಮಗಳನ್ನು ನ್ಯಾಯಾಂಗ ಕ್ಷೇತ್ರದಲ್ಲಿರುವ ಅಧಿಕಾರಿಗಳು, ಸಿಬ್ಬಂದಿಗೆ ವಿಸ್ತರಿಸಿಲ್ಲ. ಇವರು ಜನರಿಗೆ ನ್ಯಾಯ ಒದಗಿಸಲು ಈ ಕಠಿಣ ಸಮಯದಲ್ಲೂ ಕೆಲಸ ಮಾಡುತ್ತಿದ್ದಾರೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.