ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ನಡೆದ ದಾಳಿಯ ಬಗ್ಗೆ ಸ್ವತಂತ್ರವಾಗಿ ತನಿಖೆ ನಡೆಸುವ ಜವಾಬ್ದಾರಿಯನ್ನು ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ವಹಿಸಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಜನವರಿ 29ರಂದು ದೆಹಲಿಯ ಸಿಂಗು ಗಡಿಯಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿದ್ದ ರೈತರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಅಲ್ಲಿ ಭದ್ರತೆ ನಿಯೋಜಿಸಲಾಗಿದ್ದ ’ಪೊಲೀಸರ ನೆರವು ಮತ್ತು ಮಾರ್ಗದರ್ಶನದಲ್ಲಿ’ ಈ ದಾಳಿ ನಡೆದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಈ ಘಟನೆ ಕುರಿತು ಆಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಆದರೆ, ಇದುವರೆಗೆ ಎಫ್ಐಆರ್ ಹಾಕಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಸಿಬಿಐ, ಮುಖ್ಯ ನ್ಯಾಯಮೂರ್ತಿಗಳು, ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆ ಕುರಿತು ದೂರು ನೀಡಲಾಗಿದೆ. ಆದರೆ, ಯಾವ ಸಂಸ್ಥೆಯೂ ಈವರೆಗೂ ಕ್ರಮ ಜರುಗಿಸಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಎಸ್ಐಟಿ ತನಿಖೆ ಜೊತೆಗೆ ಘಟನೆಗೆ ಸಂಬಂಧಿಸಿದ ವೀಡಿಯೊ ದೃಶ್ಯಾವಳಿಗಳನ್ನು ರಕ್ಷಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.