ADVERTISEMENT

ವೈದ್ಯಕೀಯ ಆಮ್ಲಜನಕ ಕೊರತೆ: ಉನ್ನತ ಮಟ್ಟದ ತನಿಖೆ ಕೋರಿ ‘ಸುಪ್ರೀಂ’ಗೆ ಅರ್ಜಿ

ಕೋವಿಡ್‌ನ 2ನೇ ಅಲೆ ವೇಳೆ ಸಾವು ಹೆಚ್ಚಲು ಕಾರಣ ಆರೋಪ * ಸೋಮವಾರ ವಿಚಾರಣೆ

ಪಿಟಿಐ
Published 3 ಅಕ್ಟೋಬರ್ 2021, 10:53 IST
Last Updated 3 ಅಕ್ಟೋಬರ್ 2021, 10:53 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಕೋವಿಡ್‌–19ನ ಎರಡನೇ ಅಲೆ ವೇಳೆ ವೈದ್ಯಕೀಯ ಆಮ್ಲಜನಕ ಲಭ್ಯವಿರಲಿಲ್ಲ ಮತ್ತು ಪೂರೈಕೆ ಇರಲಿಲ್ಲ ಎಂಬ ಆರೋಪಗಳ ಕುರಿತು ಆಯೋಗವೊಂದರಿಂದ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಬಿ.ವಿ.ನಾಗರತ್ನ ಅವರಿರುವ ನ್ಯಾಯಪೀಠವು ಸೋಮವಾರ (ಅ.4) ಈ ಅರ್ಜಿಯ ವಿಚಾರಣೆ ನಡೆಸಲಿದೆ. ದೆಹಲಿ ನಿವಾಸಿಯೊಬ್ಬರ ಪರವಾಗಿ ವಕೀಲ ರಾಜೀವ್‌ ಕುಮಾರ್ ದುಬೆ ಈ ಅರ್ಜಿ ಸಲ್ಲಿಸಿದ್ದಾರೆ.

ಕೋವಿಡ್‌ನ 2ನೇ ಅಲೆಯ ಮಾರ್ಚ್‌ ಹಾಗೂ ಏಪ್ರಿಲ್‌ ಅವಧಿಯಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆ ದೇಶದ ವಿವಿಧ ಭಾಗಗಳಲ್ಲಿ ಸಾಕಷ್ಟು ಜನ ರೋಗಿಗಳ ಸಾವಿಗೆ ಕಾರಣವಾಯಿತು ಎಂದು ಅರ್ಜಿಯಲ್ಲಿ ದೂರಲಾಗಿದೆ.

ADVERTISEMENT

ಈ ವಿಷಯ ಕುರಿತು ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ಇತರ ಸಂಸ್ಥೆಗಳಿಂದ ತನಿಖೆ ನಡೆಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಹೈಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ ನೇತೃತ್ವದ ಆಯೋಗದಿಂದ ಈ ಕುರಿತು ತನಿಖೆ ನಡೆಸುವಂತೆಯೂ ಅರ್ಜಿದಾರರು ಕೋರಿದ್ದಾರೆ.

ಕೇಂದ್ರ ಸರ್ಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ವಿವಿಧ ರಾಜ್ಯಗಳ ಆರೋಗ್ಯ ಇಲಾಖೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.