ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಆ ಸ್ಥಳದಿಂದ ತೆರವುಗೊಳಿಸುವಂತೆ ಸಲ್ಲಿಸಲಾಗಿರುವ ಪಿಐಎಲ್ನ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ಗೆ ಹೊಸದಾಗಿ ಅರ್ಜಿ ಸಲ್ಲಿಸಲಾಗಿದೆ.
ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಬಳಿ, ಕೈ ಕತ್ತರಿಸಲಾಗಿದ್ದ ವ್ಯಕ್ತಿಯ ಶವವೊಂದು ಶುಕ್ರವಾರ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್ಗೆ ಈ ಅರ್ಜಿ ಸಲ್ಲಿಸಲಾಗಿದೆ.
ಪ್ರತಿಭಟನಕಾರರನ್ನು ತೆರವುಗೊಳಿಸುವಂತೆ ಕೋರಿ ಸ್ವಾತಿ ಗೋಯೆಲ್ ಮತ್ತು ಸಂಜೀವ್ ನೆವಾರ್ ಎಂಬುವವರು ಕಳೆದ ಮಾರ್ಚ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಿ ಅವರು ವಕೀಲ ಶಶಾಂಕ್ ಶೇಖರ್ ಝಾ ಮೂಲಕ ಸುಪ್ರೀಂ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಬಳಿ ಪೊಲೀಸರು ನಿರ್ಮಿಸಿದ್ದ ಕಬ್ಬಿಣದ ತಂತಿಗಳ ತಡೆಗೋಡೆಗೆ ಬಿಗಿದ ರೀತಿಯಲ್ಲಿ ಕೈ ತುಂಡರಿಸಿದ ಶವವೊಂದು ಶುಕ್ರವಾರ ಪತ್ತೆಯಾಗಿತ್ತು. ಮೃತ ವ್ಯಕ್ತಿಯನ್ನು ಪಂಜಾಬ್ನ ತರನ್ ತರನ್ ಜಿಲ್ಲೆಯ ಲಖ್ಬೀರ್ ಸಿಂಗ್(35) ಎಂದು ಗುರುತಿಸಲಾಗಿದೆ.
ಈ ಘಟನೆಯನ್ನು ಉಲ್ಲೇಖಿಸಿರುವ ಅರ್ಜಿದಾರರು, ‘ಬದುಕುವ ಹಕ್ಕಿಗಿಂತವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ದೊಡ್ಡದಲ್ಲ. ಈ ಪ್ರತಿಭಟನೆಗೆ ಅವಕಾಶ ನೀಡಿದರೆ ಇದರಿಂದ ರಾಷ್ಟ್ರಕ್ಕೆ ನಷ್ಟವಾಗುತ್ತದೆ‘ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.