ನವದೆಹಲಿ: ಕೋವಿಡ್ನಿಂದ ನಿತ್ಯ ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ, ದೆಹಲಿಯಲ್ಲಿ ಚಿತಾಗಾರ ಮತ್ತು ಸ್ಮಶಾನ ಸ್ಥಳಗಳನ್ನು ತಾತ್ಕಾಲಿಕವಾಗಿ ಹೆಚ್ಚಿಸಬೇಕೆಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಪ್ರತಿಕ್ರಿಯಿಸುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವನ್ನೊಳಗೊಂಡ ನ್ಯಾಯಪೀಠವು ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ತಮ್ಮ ನಿಲುವನ್ನು ತಿಳಿಸುವಂತೆ ಕೇಂದ್ರ, ದೆಹಲಿ ಸರ್ಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಪಾಲಿಕೆಗೆ ನೋಟಿಸ್ ನೀಡಿತು. ಅರ್ಜಿದಾರ ಪ್ರತ್ಯುಷ್ ಪ್ರಸನ್ನ ಅವರು ನೀಡಿದ ಪ್ರತಿಕ್ರಿಯೆಗಳನ್ನು ಪರಿಗಣಿಸುವಂತೆ ನ್ಯಾಯಾಲಯ ಅಧಿಕಾರಿಗಳಿಗೆ ನಿರ್ದೇಶನ ನೀಡಿತು.
ವಕೀಲ ಸ್ನಿಗ್ಧಾ ಸಿಂಗ್ ಅವರ ಮೂಲಕ ಸಲ್ಲಿಸಿದ ಈ ಅರ್ಜಿಯಲ್ಲಿ, ಪ್ರಸನ್ನ ಅವರು ‘ಆಸ್ಪತ್ರೆಯಲ್ಲಿ ಹಾಸಿಗೆ, ಆಮ್ಲಜನಕ ಸೇರಿದಂತೆ ಹಲವು ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ಸಂಭವಿಸುತ್ತಿವೆ. ಇದರಿಂದಾಗಿ ಚಿತಾಗಾರಗಳು, ಸ್ಮಶಾನ ಸ್ಥಳಗಳು ಭರ್ತಿಯಾಗಿವೆ. ಶವಸಂಸ್ಕಾರಕ್ಕೆ ಜಾಗವಿಲ್ಲದಂತಾಗಿದೆ. ತಾತ್ಕಾಲಿಕವಾಗಿ ಚಿತಾಗಾರ ಮತ್ತು ಸ್ಮಶಾನಗಳ ಸಂಖ್ಯೆಯನ್ನು ಹೆಚ್ಚಿಸಬೇಕು‘ ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.