ನವದೆಹಲಿ: ದೆಹಲಿ ಮತ್ತು ಇತರೆಡೆಗಳಲ್ಲಿ ಪಟಾಕಿ ನಿಷೇಧ ತೆರವುಗೊಳಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಗುರುವಾರ ನಿರಾಕರಿಸಿರುವ ಸುಪ್ರೀಂ ಕೋರ್ಟ್, ‘ದಯವಿಟ್ಟು ಜನರು ಶುದ್ಧ ಗಾಳಿ ಉಸಿರಾಡಲು ಬಿಡಿ. ಹಬ್ಬ ಆಚರಣೆಗೆ ಹಲವಾರು ದಾರಿಗಳಿವೆ. ನೀವು ಸಿಹಿತಿಂಡಿ ಖರೀದಿಸಲು ಹಣ ಖರ್ಚು ಮಾಡಿ’ ಎಂದು ಹೇಳಿದೆ.
ಪಟಾಕಿ ನಿಷೇಧದ ವಿರುದ್ಧ ಬಿಜೆಪಿ ಸಂಸದ ಮನೋಜ್ ತಿವಾರಿ ಪರ ಅರ್ಜಿ ಸಲ್ಲಿಸಿದ್ದ ವಕೀಲ ಶಶಾಂಕ್ ಶೇಖರ್ ಝಾ ಅವರು, ಬೆಳೆಯ ಅವಶೇಷ ಸುಡುವುದರಿಂದ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ ಎಂದು ವಾದಿಸಿದರು. ಈ ವೇಳೆ ನ್ಯಾಯಮೂರ್ತಿ ಎಂ.ಆರ್.ಶಾ ನೇತೃತ್ವದ ಪೀಠವು ಹೀಗೆ ಅಭಿಪ್ರಾಯಪಟ್ಟಿದೆ.
ಈ ಅರ್ಜಿಯನ್ನು ನಂತರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿಯೂ ನ್ಯಾಯಪೀಠ ಹೇಳಿದೆ. ‘ಹಿಂದೂಗಳ ಪ್ರಮುಖ ಹಬ್ಬವಾದ ದೀಪಾವಳಿ ಆಚರಣೆಯ ವೇಳೆ ಜನರು ತೊಂದರೆಗೆ ಒಳಗಾಗುತ್ತಿದ್ದಾರೆ. ಸಾರ್ವಜನಿಕರ ಹಿತಾಸಕ್ತಿ ರಕ್ಷಣೆಗೆ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದೂ ತಿವಾರಿ ಅವರು ಅರ್ಜಿಯಲ್ಲಿ ಕೋರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.