ಮಂಡಿ: ಹಿಮಾಚಲ ಪ್ರದೇಶದಲ್ಲಿ 'ಡಬಲ್-ಎಂಜಿನ್' ಸರ್ಕಾರದಿಂದ ಅಭಿವೃದ್ಧಿ ಯೋಜನೆಗಳು ವೇಗದಲ್ಲಿ ಅನುಷ್ಠಾನಕ್ಕೆ ಬರುವುದರಿಂದ ರಾಜ್ಯದ ಜನರಿಗೆ ಪ್ರಯೋಜನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ತಿಳಿಸಿದ್ದಾರೆ.
ಕೇಂದ್ರದಲ್ಲಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದು, ರಾಜ್ಯದ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಮೋದಿ ಹೇಳಿದ್ದಾರೆ.
ಮುಖ್ಯಮಂತ್ರಿ ಜೈರಾಮ್ ಠಾಕೂರ್ ನೇತೃತ್ವದ ಬಿಜೆಪಿ ಸರ್ಕಾರದ ನಾಲ್ಕನೇ ವರ್ಷ ಪೂರ್ಣಗೊಳಿಸಿದ್ದು, ಇದರ ಅಂಗವಾಗಿ ಮಂಡಿಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, 'ಕೇಂದ್ರವು ಪ್ರಾರಂಭಿಸಿದ ವಿವಿಧ ಜನಪರ ಯೋಜನೆಗಳನ್ನು ಹಿಮಾಚಲ ಪ್ರದೇಶದಲ್ಲಿ ಠಾಕೂರ್ ಸರ್ಕಾರವು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದ ಪರಿಣಾಮ ಕಳೆದ ನಾಲ್ಕು ವರ್ಷಗಳಲ್ಲಿ ಜನರು ಹೆಚ್ಚು ಪ್ರಯೋಜನ ಪಡೆದಿದ್ದಾರೆ' ಎಂದು ಹೇಳಿದರು.
ಹಿಮಾಚಲ ಪ್ರದೇಶದಲ್ಲಿ 2022ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
'ಕೇಂದ್ರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತ್ತು. ಹಿಮಾಚಲ ಪ್ರದೇಶದ ಸರ್ಕಾರವು ಇದಕ್ಕೆ ಸಮಾನವಾಗಿ 'ಹಿಮ್ಕೇರ್' ಯೋಜನೆಯನ್ನು ಜಾರಿಗೆ ತಂದಿದೆ. ಈ ಎರಡು ಯೋಜನಗಳ ಅಡಿಯಲ್ಲಿ ರಾಜ್ಯದ ಒಟ್ಟು 1.25 ಲಕ್ಷ ನಿವಾಸಿಗಳು ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಪಡೆದರು' ಎಂದು ಹೇಳಿದರು.
ಜನರ ಜೀವನಉತ್ತಮಗೊಳಿಸುವುದಕ್ಕೆ ಮೊದಲ ಆದ್ಯತೆ ನೀಡುತ್ತೇವೆ. ವಿದ್ಯುತ್ ಅದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹಲವು ವಿದ್ಯುತ್ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ ಹೇಳಿದರು.
ಇದಕ್ಕೂ ಮೊದಲು ಪ್ರಧಾನಿ ಮೋದಿ, ರಾಜ್ಯದಲ್ಲಿ ₹11,581 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ₹28,197 ಕೋಟಿ ಹೆಚ್ಚು ಮೌಲ್ಯದ287 ಹೂಡಿಕೆ ಯೋಜನೆಗಳನ್ನು ಅವರುಉದ್ಘಾಟಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.