ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೇಶದಲ್ಲಿ ಉನ್ನತ ಶಿಕ್ಷಣದಲ್ಲಿ ಸುಧಾರಣೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಅವರು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು.
ಈ ಕ್ರಾಂತಿಕಾರಕ ಶಿಕ್ಷಣ ಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಲಿದ್ದು, ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಎಂದರು. ಪುಸ್ತಕಗಳ ಹೊರೆ ಕಡಿಮೆ ಮಾಡಿರುವ ಈ ಯೋಜನೆಯು ವಿದ್ಯಾರ್ಥಿಗಳ ಆಸಕ್ತಿ ಆಧಾರದ ಮೇಲೆ ಕಲಿಕೆಯ ಸ್ವಾತಂತ್ರ್ಯಕೊಟ್ಟಿರುವುದು ವಿಶೇಷ ಎಂದರು.
ಕಲಿಕೆಯ ಮಧ್ಯೆ ತಾನು ಓದುವ ವಿಷಯದ ಮೇಲೆ ಆಸಕ್ತಿ ಇಲ್ಲದಿದ್ದರೆ ಅದನ್ನು ಬದಲಾಯಿಸುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಮೋದಿ ತಿಳಿಸಿದರು.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸುಧಾರಣೆಯ ಅಗತ್ಯವಿದೆ. ವಿದ್ಯಾರ್ಥಿಗಳು ಸಂಶೋಧನೆ ಕಡೆ ಆಸಕ್ತರಾಗುವಂತಹ ಶಿಕ್ಷಣ ಇದಾಗಲಿದೆ. ಮುಖ್ಯವಾಗಿ ಶಿಕ್ಷಣ ಜೀವನಾಧರಿತವಾಗಲಿದೆ ಎಂದು ಮೋದಿ ಹೇಳಿದರು.
ದೇಶದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುವುದು. ಎಲ್ಲಿ ಸುಧಾರಣೆಯ ಅಗತ್ಯವಿದೆಯೋ ಅಲ್ಲಿ ಸುಧಾರಣೆ ಮಾಡಲಾಗುತ್ತದೆ. ಕೌಶಲ್ಯಾಧರಿತ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಶಿಕ್ಷಣ ಬದುಕು ರೂಪಿಸುವಂತಾಗಬೇಕು ಆಗ ಮಾತ್ರ ಕಲಿಕೆ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ನಡೆ ಶುರುವಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಮೋದಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.