ಪಿಟಿಐ
ನವದೆಹಲಿ: ‘ಕಾಶ್ಮೀರದ ವಿಷಯದಲ್ಲಿ ಭಾರತ ಯಾರದ್ದೇ ಮಧ್ಯಸ್ಥಿಕೆಯನ್ನು ಒಪ್ಪುವುದಿಲ್ಲ ಮತ್ತು ಪಾಕಿಸ್ತಾನ ಕಾನೂನು ಬಾಹಿರವಾಗಿ ಆಕ್ರಮಿಸಿಕೊಂಡಿರುವ ಭಾಗವನ್ನು ಹಿಂದಕ್ಕೆ ಪಡೆಯುವ ಕುರಿತು ಮಾತ್ರ ಚರ್ಚೆ ನಡೆಯಬೇಕಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳು ಭಾನುವಾರ ತಿಳಿಸಿವೆ.
ಭಾರತದ ವಿರುದ್ಧ ಪಾಕಿಸ್ತಾನ ಎಲ್ಲಿಯವರೆಗೆ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿರುತ್ತದೆಯೋ ಅಲ್ಲಿಯವರೆಗೂ, ಸಿಂಧೂ ನೀರು ಒಪ್ಪಂದ ಅಮಾನತಿನಲ್ಲಿ ಇರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದೂ ಮೂಲಗಳು ಹೇಳಿವೆ.
‘ಆಪರೇಷನ್ ಸಿಂಧೂರ’ ಮುಕ್ತಾಯಗೊಂಡಿಲ್ಲ ಎಂದು ಹೇಳಿರುವ ಪ್ರಧಾನಿ ಅವರು, ‘ಪಾಕ್ ಕಡೆಯಿಂದ ಬರುವ ಗುಂಡುಗಳಿಗೆ ಪ್ರತಿಯಾಗಿ ಫಿರಂಗಿ ಮೂಲಕ ಉತ್ತರ ನೀಡಬೇಕು. ಪಾಕ್ನ ಪ್ರತಿಯೊಂದು ಕ್ರಿಯೆಗೂ ಪೂರ್ಣ ಬಲದಿಂದ ಪ್ರತಿಕ್ರಿಯೆ ನೀಡಬೇಕು ಎಂದು ಸಶಸ್ತ್ರ ಪಡೆಗಳಿಗೆ ಸೂಚಿಸಿದ್ದಾರೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಪಾಕಿಸ್ತಾನವು ಭಯೋತ್ಪಾದನೆಯನ್ನು ಪೋಷಿಸಿಕೊಂಡು, ತನ್ನ ಆಯ್ಕೆಯ ಕ್ಷೇತ್ರದಲ್ಲಿ ಸಹಕಾರ ನಿರೀಕ್ಷಿಸಿದರೆ ಆಗುವುದಿಲ್ಲ ಎಂಬ ಸಂದೇಶವನ್ನು ಪ್ರಧಾನಿ ನೀಡಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಪಾಕಿಸ್ತಾನದ ಜತೆಗೆ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒ) ಮೂಲಕ ಮಾತ್ರ ಮಾತುಕತೆ ನಡೆಯಲಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.