ಪ್ರಧಾನಿ ನರೇಂದ್ರ ಮೋದಿ
ಪಿಟಿಐ ಚಿತ್ರ
ನವದೆಹಲಿ: ಪಾಕಿಸ್ತಾನದ ಪ್ರತಿಯೊಂದು ಕ್ರಿಯೆಗೂ ದೇಶದ ಪ್ರತಿಕ್ರಿಯೆ ಹೆಚ್ಚು ಬಲಶಾಲಿಯಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಶಸ್ತ್ರ ಪಡೆಗಳಿಗೆ ಸೂಚನೆ ನೀಡಿದ್ದಾರೆ ಎಂದು ಸರ್ಕಾರಿ ಮೂಲಗಳು ಭಾನುವಾರ ತಿಳಿಸಿವೆ.
ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಮತ್ತು ಸೇನಾಪಡೆಗಳ ಮುಖ್ಯಸ್ಥರ ಜೊತೆ ಭದ್ರತಾ ಸಭೆ ನಡೆಸಿದ ಪ್ರಧಾನಿ ಮೋದಿ, ಪಾಕ್ನಿಂದ ಬರುವ ಗುಂಡುಗಳಿಗೆ ಫಿರಂಗಿಗಳ ಮೂಲಕ ಪ್ರತಿಕ್ರಿಯಿಸಬೇಕು’(ವಾಹನ್ ಸೆ ಗೋಲಿ ಚಲೇಗಿ, ತೋ ಯಹಾನ್ ಸೆ ಗೋಲಾ ಚಲೇಗಾ) ಎಂದು ಸಶಸ್ತ್ರ ಪಡೆಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ಆಪರೇಷನ್ ಸಿಂಧೂರ’ಇನ್ನೂ ಮುಕ್ತಾಯಗೊಂಡಿಲ್ಲ. ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತದ ಪ್ರತಿಕ್ರಿಯೆಯಲ್ಲಿ ಹೊಸ ಸಾಮಾನ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಗಡಿಯಾಚೆಗಿನ ಭಯೋತ್ಪಾದನೆಗೆ ತೆರಬೇಕಾದ ಬೆಲೆ ಹೆಚ್ಚಾಗಲಿದೆ. ಪಾಕಿಸ್ತಾನವು ತನ್ನ ಆಯ್ಕೆಯ ಕ್ಷೇತ್ರಗಳಲ್ಲಿ ಸಹಕಾರವನ್ನು ನಿರೀಕ್ಷಿಸುತ್ತಾ ಭಯೋತ್ಪಾದನೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ..
ಕಾಶ್ಮೀರ ವಿಷಯದಲ್ಲಿ ಭಾರತ ಎಂದಿಗೂ ಮಧ್ಯಸ್ಥಿಕೆಯನ್ನು ಸ್ವೀಕರಿಸುವುದಿಲ್ಲ ಮತ್ತು ಚರ್ಚಿಸಬೇಕಾದ ಏಕೈಕ ವಿಷಯವೆಂದರೆ, ಪಾಕಿಸ್ತಾನವು ಆಕ್ರಮಣವಾಗಿ ವಶಪಡಿಸಿಕೊಂಡಿರುವ ಪ್ರದೇಶವನ್ನು ಹಿಂದಿರುಗಿಸಬೇಕಾಗಿರುವುದು ಎಂದು ಅವರು ಹೇಳಿದ್ದಾರೆ.
ನಾಲ್ಕು ದಿನಗಳ ಕಾಲ ನಡೆದ ತೀವ್ರ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ, ಭೂಮಿ, ಆಗಸ ಮತ್ತು ಸಮುದ್ರದ ಮೂಲಕ ಎಲ್ಲ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ ಒಪ್ಪಂದ ಮಾಡಿಕೊಂಡಿವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶನಿವಾರ ಸಂಜೆ ಘೋಷಿಸಿದ್ದರು.
ಈ ಬೆಳವಣಿಗೆಯನ್ನು ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದರು. ಅಮೆರಿಕದ ಮಧ್ಯಸ್ಥಿಕೆಯ ನಂತರ, ಎರಡೂ ದೇಶಗಳು ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅವರು ಹೇಳಿದ್ದರು.
ಇದಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ, ಯುದ್ಧ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಮತ್ತು ಕ್ಷಿಪಣಿ ದಾಳಿ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.