ನವದೆಹಲಿ: ಕೋವಿಡ್–19 ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 13ರಂದು ಮುಖ್ಯಮಂತ್ರಿಗಳ ಜತೆ ಸಭೆ ನಡೆಸುವ ಸಾಧ್ಯತೆ ಇದೆ.
ಓಮೈಕ್ರಾನ್ನಿಂದಾಗಿ ದೇಶದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.
ಕೋವಿಡ್ ಪರಿಸ್ಥಿತಿ ಬಗ್ಗೆ ಪರಾಮರ್ಶೆಗಾಗಿ ಭಾನುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದ್ದ ಮೋದಿ, ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಖಚಿತಪಡಿಸಿಕೊಳ್ಳಬೇಕಾದ ಅಗತ್ಯವನ್ನು ಒತ್ತಿ ಹೇಳಿದ್ದರು. ಜತೆಗೆ, ಈ ವಿಚಾರದಲ್ಲಿ ರಾಜ್ಯಗಳೊಂದಿಗೆ ಸಮನ್ವಯವನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಈ ಮಧ್ಯೆ, 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಲಸಿಕೆ ನೀಡಿಕೆ ಅಭಿಯಾನವೂ ಆರಂಭಗೊಂಡಿದೆ.
ಕೋವಿಡ್ ವಿರುದ್ಧದ ಹೋರಾಟಕ್ಕೆ ಲಸಿಕಾ ಅಭಿಯಾನವೇ ಪರಿಣಾಮಕಾರಿ ಅಸ್ತ್ರ ಎಂದು ಪ್ರಧಾನಿ ಈಗಾಗಲೇ ಹೇಳಿದ್ದಾರೆ.
ಕೋವಿಡ್ ಸಾಂಕ್ರಾಮಿಕ ಆರಂಭಗೊಂಡಂದಿನಿಂದಲೂ ಪ್ರಧಾನಿ ಮೋದಿ ಅನೇಕ ಬಾರಿ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.